ನವದೆಹಲಿ: ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ದೆಹಲಿ ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೊಣೆ ಹೊತ್ತುಕೊಳ್ಳುವ ಬದಲು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ.
ದೆಹಲಿಯಲ್ಲಿ ಪ್ರತಿದಿನ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಷ್ಟು ದಿನ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಕೇಜ್ರಿವಾಲ್, ಇದೀಗ ಸುಪ್ರೀಂಕೋರ್ಟ್ ಮೇಲೆ ಆರೋಪ ಮಾಡಿದ್ರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕೇಂದ್ರ, ನೆರೆಹೊರೆಯ ರಾಜ್ಯ, ಆಸ್ಪತ್ರೆ, ಟೆಸ್ಟಿಂಗ್ ಸೆಂಟರ್ಗಳ ಮೇಲೆ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ಆದರೆ ಕೋವಿಡ್ ನಿರ್ವಹಣೆಯಲ್ಲಿ ಅವರು ಸಂಪೂರ್ಣವಾಗಿ ವಿಫಲವಾಗಿದ್ದು, ಜವಾಬ್ದಾರಿ ಮಾತ್ರ ಹೊತ್ತುಕೊಳ್ಳುತ್ತಿಲ್ಲ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಈಗಾಗಲೇ ಕೇಜ್ರಿವಾಲ್ ಸರ್ಕಾರಕ್ಕೆ ಛೀಮಾರಿ ಹಾಕಿದ್ದು, ಮೃತದೇಹಗಳನ್ನ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದಿದೆ. ಇದೇ ವಿಷಯವನ್ನಿಟ್ಟುಕೊಂಡು ದೆಹಲಿ ಸಿಎಂ ಸುಪ್ರೀಂ ಮೇಲೆ ವಾಗ್ದಾಳಿ ನಡೆಸಬಹುದು ಎಂದಿದ್ದಾರೆ.
ಜತೆಗೆ ಚೆನ್ನೈ ಹಾಗೂ ಮುಂಬೈನಲ್ಲಿ ಅತಿ ಹೆಚ್ಚು ಕೋವಿಡ್ ಟೆಸ್ಟ್ ನಡೆಯುತ್ತಿರಬೇಕಾದರೆ ದೆಹಲಿಯಲ್ಲಿ ಯಾಕೆ ಅದು ಸಾಧ್ಯವಿಲ್ಲ? ಕೇವಲ ತಾಂತ್ರಿಕ ದೋಷದಿಂದ ನೀವು ಇದನ್ನ ನಿರಾಕರಣೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ವಾರ್ನ್ ಮಾಡಿದೆ.