ನವದೆಹಲಿ: ಕಳೆದ 24 ಗಂಟೆಗಳಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿಲ್ಲ. ಸೋಂಕಿತರು ಗುಣಮುಖರಾಗುತ್ತಿರುವ ಪ್ರಮಾಣವು ಶೇಕಡಾ 30ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದು, ಭಾರತವು ಕೋವಿಡ್-19 ವಿರುದ್ಧದ ಹೋರಾಟದ ಯಶಸ್ಸಿನಲ್ಲಿ ವೇಗವಾಗಿ ಸಾಗುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,511 ಕೋವಿಡ್ -19 ರೋಗಿಗಳು ಚೇತರಿಸಿಕೊಂಡಿದ್ದು, ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಚೇತರಿಕೆಯಾಗಿದೆ. ಭಾರತವು ಶನಿವಾರ 86,000 ಕೋವಿಡ್-19 ಪರೀಕ್ಷೆಗಳನ್ನು ನಡೆಸಿದ್ದು, ಇದೀಗ ದೇಶವು ದಿನಕ್ಕೆ 95,000 ಪರಿಕ್ಷಾ ಸಾಮರ್ಥ್ಯ ಹೊಂದಿದೆ ಎಂದರು.
ಭಾರತದಲ್ಲಿ 472 ಪ್ರಯೋಗಾಲಯಗಳಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಶನಿವಾರದ ತನಕ ದೇಶದಲ್ಲಿ ಒಟ್ಟು 16,09,777 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದರು.
ಕೋವಿಡ್-19 ನಿರ್ವಹಣೆಗಾಗಿ ದೆಹಲಿ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್ ಮತ್ತು ಪಶ್ಚಿಮ ಬಂಗಾಳಕ್ಕೆ ಕೇಂದ್ರದಿಂದ ತಂಡಗಳನ್ನು ಕಳುಹಿಸಲಾಗಿದೆ ಎಂದರು.
ಕಳೆದ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ದಾದ್ರಾ ಮತ್ತು ನಗರ ಹವೇಲಿ, ಗೋವಾ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಣಿಪುರ, ಒಡಿಶಾ, ಮಿಜೋರಾಂ ಹಾಗೂ ಪುದುಚೇರಿಯಲ್ಲಿ ಯಾವುದೇ ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿಲ್ಲ. ದಮನ್ ಮತ್ತು ಡಿಯು, ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ಲಕ್ಷದ್ವೀಪದಲ್ಲಿ ಇದುವರೆಗೂ ಒಂದೇ ಒಂದು ಕೋವಿಡ್-19 ಪ್ರಕರಣ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.