ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ರ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಈ ಪ್ರಸ್ತಾವನೆಗೆ ರಾಷ್ಟ್ರಪತಿ ಸಹಿ ಕೂಡಾ ಬಿದ್ದಿದ್ದು, ಇದು ಇಂದಿನಿಂದಲೇ ಜಾರಿಯಾಗಲಿದೆ. ಹೀಗಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸುವ ಉದ್ದೇಶದಿಂದ ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ರವಾನೆ ಮಾಡಲಾಗಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಈ ಕ್ರಮಕ್ಕೆ ಬಿಜೆಪಿ ಅನೇಕ ಮುಖಂಡರು ಸಂತಸ ವ್ಯಕ್ತಪಡಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ಮಾಧವ್ ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವಿಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಆರ್ಟಿಕಲ್ 370 ರದ್ದು ಮಾಡುವಂತೆ ಆಗ್ರಹಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯ ಫೋಟೋ ಹಾಕಿ, ಭರವಸೆ ಈಡೇರಿದೆ ಎಂದು ಬರೆದುಕೊಂಡಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೋದಿ ಪ್ರತಿಭಟನೆ ನಡೆಸಿದ್ದರು. 370 ಆರ್ಟಿಕಲ್ ತೆಗೆದು ಹಾಕಿ, ಭಯೋತ್ಪಾದನೆಗೆ ಇತಿಶ್ರೀ ಹಾಡಿ ಎಂಬ ಬ್ಯಾನರ್ವೊಂದು ಮೋದಿ ಹಿಂದೆ ಈ ಚಿತ್ರದಲ್ಲಿ ಕಂಡಿದೆ. ಇನ್ನು ಕೇಂದ್ರದ ಈ ನಿರ್ಧಾರಕ್ಕೆ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿ ನರೇಂದ್ರ ಮೋದಿ ಹಾಗೂ ಅಮಿತ್ ಶಾಗೆ ಅಭಿನಂದನೆ ಸಲ್ಲಿಕೆ ಮಾಡಿದ್ದು, ಇದೊಂದು ಐತಿಹಾಸಿಕ ದಿನ ಎಂದಿದ್ದಾರೆ. ಇನ್ನು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.