ನವದೆಹಲಿ: ಜಾರ್ಖಂಡ್ ವಿಧಾನಸಭೆ ಫಲಿತಾಂಶ ಇಂದು ಬಹಿರಂಗಗೊಂಡಿದ್ದು, ಆಡಳಿತರೂಢ ಪಕ್ಷ ಭಾರತೀಯ ಜನತಾ ಪಾರ್ಟಿ ಹೀನಾಯ ಸೋಲು ಕಾಣುವ ಮೂಲಕ ಮುಖಭಂಗಕ್ಕೊಳಗಾಗಿದೆ.
ಜಾರ್ಖಂಡ್ನಲ್ಲಿ ಬಿಜೆಪಿ ಸೋಲು ಕಾಣುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೇನ್ ಹಾಗೂ ಮೈತ್ರಿ ಕೂಟಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಿ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ಅಭಿವೃದ್ಧಿ ಪರ ಕೆಲಸ ಮಾಡಲು ಬಿಜೆಪಿಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು. ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿರುವ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದು, ರಾಜ್ಯದ ಜನರು ನೀಡಿರುವ ಜನಾದೇಶಕ್ಕೆ ನಾವು ಗೌರವ ನೀಡುತ್ತೇವೆ. ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಲು ಜನರು 5 ವರ್ಷಗಳ ಕಾಲ ನಮಗೆ ನೀಡಿದ್ದಕ್ಕೆ ನಾವು ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇವೆ. ಜಾರ್ಖಂಡ್ ಅಭಿವೃದ್ಧಿಗಾಗಿ ನಾವು ಸದಾ ಸಿದ್ಧರಿದ್ದೇವೆ ಎಂದು ಬರೆದುಕೊಂಡಿದ್ದು, ಬಿಜೆಪಿಯ ಎಲ್ಲ ಕಾರ್ಯಕರ್ತರು ಹಾಗೂ ಪಕ್ಷಕ್ಕಾಗಿ ದುಡಿದವರಿಗೆ ಅಭಿನಂದನೆ ಎಂದು ತಿಳಿಸಿದ್ದಾರೆ.
81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದ್ದರೆ, ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, ಆರ್ಜೆಡಿ ಹಾಗೂ ಜೆಎಂಎಂ ಬರೋಬ್ಬರಿ 47 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದೆ.