ನವದೆಹಲಿ:ಕಳೆದ ಫೆಬ್ರವರಿಯಲ್ಲಿ ನಗರದ ಈಶಾನ್ಯ ಭಾಗದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ)ದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ದೆಹಲಿ ಹಿಂಸಾಚಾರ ಪ್ರಕರಣ: ಆಪ್ ನಾಯಕ ತಾಹಿರ್ ಹುಸೇನ್ ಜಾಮೀನು ಅರ್ಜಿ ವಜಾ
ಸಿಎಎ ಪರ ವಿರೋಧ ಗುಂಪುಗಳ ನಡುವೆ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿರುವ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದ ಪೊಲೀಸ್ ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂಬ ಕಾರಣಕ್ಕೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ತ್ಯಾಗಿತಾ ಸಿಂಗ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ನ್ಯಾಯಾಲಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದ ತಾಹಿರ್ ಪರ ವಕೀಲ ಜಾವೇದ್ ಅಲಿ, ತನ್ನ ಕಕ್ಷಿದಾರ ನಿರಪರಾಧಿ, ದುರುದ್ದೇಶದಿಂದ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದರು.
ಫೆಬ್ರವರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ) ಪರ ಮತ್ತು ವಿರೋಧಿ ಗುಂಪುಗಳ ನಡುವೆ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ 53 ಜನ ಸಾವನ್ನಪ್ಪಿದ್ದರು. ಈ ಘಟನೆ ಸಂಬಂಧಪಟ್ಟಂತೆ ಕೊಲೆ ಯತ್ನ ಮತ್ತು ಕ್ರಿಮಿನಲ್ ಕೃತ್ಯ ನಡೆಸಿದ್ದಕ್ಕಾಗಿ ಹುಸೇನ್ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ಹಲವು ಎಫ್ಐಆರ್ಗಳು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.