ಪಾಟ್ನಾ(ಬಿಹಾರ) : ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಬೆಳಕಿಗೆ ಬಂದಿದೆ. ಅಕ್ರಮವೆಸಗಿ ನೇಮಕಾತಿ ಪಟ್ಟಿಯಲ್ಲಿ ವ್ಯಕ್ತಿಯೋರ್ವ ಸ್ಥಾನ ಗಳಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ಇದೆಲ್ಲಾ ಒಂದೆಡೆಯಾದರೆ ಮತ್ತೊಂದೆಡೆ ಸರ್ಕಾರದ ನೇಮಕಾತಿ ಸಂಸ್ಥೆಗಳ ಅಕ್ರಮಗಳಿಗೆ ಅದಷ್ಟೋ ಮಂದಿ ನೊಂದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ವರ್ಷಗಟ್ಟಲೇ ಕಷ್ಟಪಟ್ಟು ಓದಿದ ಬಡ ಪ್ರತಿಭಾವಂತರು ಕಂಗಾಲಾಗಿದ್ದಾರೆ. ಅವರ ಪರಿಶ್ರಮ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ನೇಮಕಾತಿ ಸಂಸ್ಥೆಗಳಲ್ಲಿದ್ದು, ಭ್ರಷ್ಟಾಚಾರ ಎಸಗುವವರಿಗೆ ವರ್ಷಗಟ್ಟಲೇ ಕಷ್ಟಪಟ್ಟು ಓದಿ, ಪರೀಕ್ಷೆಗೆ ಸಿದ್ಧವಾಗುವವರ ಪರಿಶ್ರಮ ಅರ್ಥವಾಗಬೇಕಾದರೆ ಅವರನ್ನೇ ಕೇಳಬೇಕಾಗುತ್ತದೆ.
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಕೆಲವು ಫೋಟೋಗಳು ವೈರಲ್ ಆಗುತ್ತಿವೆ. ನದಿಯೊಂದರ ದಡದಲ್ಲಿರುವ ಮೆಟ್ಟಿಲುಗಳ ಮೇಲೆ ನೂರಾರು ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಸತತ ಅಭ್ಯಾಸ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ನೋಡಿದರೆ ಖಂಡಿತಾ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಪರಿಶ್ರಮ ಅರ್ಥವಾಗುತ್ತದೆ. ಉದ್ಯಮಿ ಹರ್ಷ ಗೋಯೆಂಕಾ ಎಂಬುವವರು ಫೋಟೋವೊಂದನ್ನು ಹಂಚಿಕೊಂಡಿದ್ದು, ಬಿಹಾರದ ಪಾಟ್ನಾದ ಗಂಗಾ ನದಿಯ ದಡದಲ್ಲಿ ನೂರಾರು ಸ್ಪರ್ಧಾರ್ಥಿಗಳು ಪರೀಕ್ಷಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಚಿತ್ರ ಭರವಸೆಯನ್ನು ಹುಟ್ಟುಹಾಕುತ್ತದೆ ಎಂದಿದ್ದಾರೆ.
ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಿ ನೇಮಕಾತಿ ಸಂಸ್ಥೆಗಳಾದ ಎಸ್ಎಸ್ಸಿ, ಯುಪಿಎಸ್ಸಿ, ರಾಜ್ಯ ನೇಮಕಾತಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳು ಹಾಗೂ ಇತರೇ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ. ಪ್ರತಿ ವಾರಾಂತ್ಯದಲ್ಲಿ ನದಿಯ ದಡದಲ್ಲಿ ಒಟ್ಟಿಗೆ ಕುಳಿತು ಅಧ್ಯಯನ ಮಾಡಲು ಇವರು ನಿರ್ಧರಿಸಿದ್ದು, ಬೇರೆ ದಿನಗಳಲ್ಲಿ ಇಷ್ಟೊಂದು ಮಂದಿ ಸ್ಪರ್ಧಾರ್ಥಿಗಳು ಈ ಸ್ಥಳದಲ್ಲಿ ಕಂಡುಬರುವುದಿಲ್ಲ ಎಂದು ತಿಳಿದುಬಂದಿದೆ.