ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಕಾನೂನು ಸಚಿವಾಲಯ ಹಾಗೂ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆ ಮಿತಿಗೊಳಿಸುವ ಪ್ರಸ್ತಾಪ ಮಾಡಿದೆ. ಚುನಾವಣಾ ನಿಧಿಯನ್ನು ಕಪ್ಪು ಹಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.
ಯಾವುದೇ ರಾಜಕೀಯ ಪಕ್ಷ ಪಡೆದುಕೊಳ್ಳುವ 2 ಸಾವಿರ ರೂಪಾಯಿಗಿಂತಲೂ ಅಧಿಕ ಮೊತ್ತವನ್ನು ಅನಾಮಧೇಯವಾಗಿ ಉಳಿಸುವಂತಿಲ್ಲ. ದೇಣಿಗೆ ನೀಡಿದವರ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು ಎಂದು ಚುನಾವಣಾ ಆಯೋಗ ಪತ್ರದಲ್ಲಿ ತಿಳಿಸಿದೆ. ಇಷ್ಟು ದಿನ ಕನಿಷ್ಠ 20 ಸಾವಿರ ರೂ. ದೇಣಿಗೆ ನೀಡಿದವರ ಮಾಹಿತಿ ಬಹಿರಂಗಪಡಿಸುವ ಅಂಶವಿತ್ತು. ಇದೀಗ ಅದನ್ನು 2 ಸಾವಿರ ರೂ.ಗಳಿಗೆ ಇಳಿಸಲು ನಿರ್ಧರಿಸಲಾಗಿದೆ.
ಕೇಂದ್ರ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಅವರು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹ ವ್ಯವಸ್ಥೆ ಶುದ್ಧೀಕರಿಸಲು ಈ ತಿದ್ದುಪಡಿ ತರುವ ಕುರಿತು ಪ್ರಸ್ತಾಪಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಯೂ ಪ್ರತ್ಯೇಕವಾಗಿ ಬ್ಯಾಂಕ್ ಖಾತೆ ಹೊಂದಿರಬೇಕು. ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ, ತದನಂತರ ಸಂಸದ ಸ್ಥಾನಕ್ಕೆ ಸ್ಪರ್ಧಿಸಿದರೆ ಎರಡು ಪ್ರತ್ಯೇಕ ಖಾತೆ ತೆರೆಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕೆಲವು ಪಕ್ಷಗಳು ದೇಣಿಗೆ ಪಡೆದುಕೊಂಡಿರುವುದರ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿಲ್ಲ. ದೊಡ್ಡ ಮೊತ್ತದ ಹಣವನ್ನು ದೇಣಿಗೆ ರೂಪದಲ್ಲಿ ಪಡೆದುಕೊಂಡಿದ್ದರೂ ಅದರ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ಆಯೋಗವು ಎಲ್ಲ ಬಗೆಯ ₹ 2,000 ಕ್ಕಿಂತ ಹೆಚ್ಚಿನ ಸ್ವೀಕೃತಿಗಳನ್ನು ಬಹಿರಂಗಪಡಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಹೇಳಿದೆ.
ಇದನ್ನೂ ಓದಿ:ECI on registration.. 17ವರ್ಷ ಮೇಲ್ಪಟ್ಟವರಿಗೆ ಚುನಾವಣಾ ಆಯೋಗದಿಂದ ಗುಡ್ ನ್ಯೂಸ್