ಲಖನೌ(ಉತ್ತರ ಪ್ರದೇಶ): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉತ್ತರಪ್ರದೇಶದ ಕೆಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಸಾವು-ನೋವಿನ ಜೊತೆಗೆ ಅಪಾರ ನಷ್ಟ ಸಂಭವಿಸಿದೆ. ಹಾಗಾಗಿ ಇಂದು ಮತ್ತು ನಾಳೆ ರಾಜ್ಯದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.
ಗುರುವಾರ ಬೆಳಗ್ಗೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿವೆ. ರಾಯ್ ಬರೇಲಿ, ಲಖನೌ, ಸುಲ್ತಾನ್ಪುರ್, ಅಯೋಧ್ಯೆ ಸೇರಿ ಹಲವು ಜಿಲ್ಲೆಗಳಲ್ಲಿ 10 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಜನರು ಸಂಚಾರಕ್ಕೆ ಅಡ್ಡಿಯಾಗಿದೆ. ಕೆಲವೆಡೆ ರೈಲ್ವೆ ಮಾರ್ಗಗಳು ಕೂಡ ಜಲಾವೃತವಾಗಿದೆ. ಜೌನ್ಪುರ, ಕೌಶಂಬಿ, ಬಾರಾಬಂಕಿಯಂತಹ ಅನೇಕ ಭಾಗಗಳಲ್ಲಿ ಮನೆ ಕುಸಿತದಿಂದ ಸಾವು ನೋವು ಹೆಚ್ಚು ಸಂಭವಿಸಿದೆ ಎಂದು ವರದಿಯಾಗಿದೆ.