ಕರ್ನಾಟಕ

karnataka

ಆಹಾರ ಭದ್ರತಾ ಕಾಯ್ದೆಯಡಿ ಒಂದು ವರ್ಷ ಉಚಿತ ಪಡಿತರ: ಇಂದಿನಿಂದಲೇ ಜಾರಿ

By

Published : Jan 1, 2023, 8:09 AM IST

Updated : Jan 1, 2023, 9:04 AM IST

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅವಧಿ ಮುಕ್ತಾಯವಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜನರಿಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹೊಸ ವರ್ಷಾರಂಭದ ದಿನದಿಂದಲೇ ಯೋಜನೆ ಜಾರಿಯಾಗಲಿದ್ದು, ಒಂದು ವರ್ಷ 81.35 ಕೋಟಿ ಫಲಾನುಭವಿಗಳು ಲಾಭ ಪಡೆಯಲಿದ್ದಾರೆ.

free-ration-for-one-year-under-food-security-act
ಆಹಾರ ಭದ್ರತಾ ಕಾಯ್ದೆಯಡಿ ಒಂದು ವರ್ಷ ಉಚಿತ ಪಡಿತರ

ನವದೆಹಲಿ:ಕೇಂದ್ರ ಸರ್ಕಾರ ಮೊದಲೇ ಘೋಷಿಸಿದಂತೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಒಂದು ವರ್ಷದವರೆಗೆ ಉಚಿತವಾಗಿ ಪಡಿತರ ವಿತರಿಸುವ ಯೋಜನೆ ಇಂದಿನಿಂದಲೇ ಜಾರಿಯಾಗಲಿದೆ. ಇದು ವರ್ಷದ ಕೊನೆಯವರೆಗೂ(ಡಿಸೆಂಬರ್​ 31) ಇರಲಿದೆ. ಇದರ ಲಾಭ ದೇಶದ 81.35 ಕೋಟಿ ಫಲಾನುಭವಿಗಳಿಗೆ ಸಿಗಲಿದೆ.

ಜನರಿಗೆ ಒಂದು ವರ್ಷ ಉಚಿತ ಆಹಾರ ಧಾನ್ಯ ನೀಡುವ ಬಗ್ಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿತ್ತು. ಇದಕ್ಕಾಗಿ ವಾರ್ಷಿಕವಾಗಿ 2 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಖರ್ಚಾಗಲಿದೆ. ಇದನ್ನು ಕೇಂದ್ರ ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ ಎಂದು ಆಹಾರ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಕಾರಣಕ್ಕೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ ಸೌಲಭ್ಯವನ್ನು ಎನ್‌ಎಫ್‌ಎಸ್‌ಎ ಅಡಿಯಲ್ಲಿ ವಿಸ್ತರಿಸಲಾಗಿದೆ. ಇದು ಫಲಾನುಭವಿಗಳನ್ನು ಸ್ಪಷ್ಟವಾಗಿ ಗುರುತಿಸಿ ಅವರಿಗೆ ಯೋಜನೆಯ ಲಾಭ ಸಿಗುವಂತೆ ಮಾಡಲಿದೆ ಎಂಬುದು ಕೇಂದ್ರದ ಅಭಿಪ್ರಾಯವಾಗಿದೆ.

ಯಾರಿಗೆ ಎಷ್ಟೆಷ್ಟು ಸೌಲಭ್ಯ?:ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ಪ್ರತಿ ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯಲಿವೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ ಬಡವರಿಗೆ ಒಂದು ಕೆಜಿ ಅಕ್ಕಿಯನ್ನು 3 ರೂ.ಗೆ ಮತ್ತು ಕೆಜಿ ಗೋಧಿಯನ್ನು 2 ರೂ. ಗೆ ನೀಡಲಾಗುತ್ತದೆ. ದೇಶಾದ್ಯಂತ 5.33 ಲಕ್ಷ ನ್ಯಾಯಬೆಲೆ ಅಂಗಡಿಗಳ ಮೂಲಕ ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡಲಾಗುತ್ತದೆ.

ಯೋಜನೆಯ ಅನುಷ್ಠಾನಕ್ಕಾಗಿ ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮೂರು ಪಡಿತರ ಅಂಗಡಿಗಳಿಗೆ ಪ್ರತಿದಿನ ಕಡ್ಡಾಯವಾಗಿ ಭೇಟಿ ನೀಡಿ ವರದಿಯನ್ನು ಸಲ್ಲಿಸಬೇಕು. ಆಹಾರ ಧಾನ್ಯ ವಿತರಿಸುವ ಡೀಲರ್​​ನ ಕಾರ್ಯವಿಧಾನದ ಬಗ್ಗೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.

ಪಿಎಂಜಿಕೆವೈ ವಿಸ್ತರಣೆ ಇಲ್ಲ:ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಜನರಿಗೆ ಉಚಿತವಾಗಿ ಪಡಿತರ ನೀಡಲು 2020 ರಲ್ಲಿ ಆರಂಭಿಸಲಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 2021ರ ಡಿಸೆಂಬರ್​ 31ಕ್ಕೆ ಕೊನೆಗೊಂಡಿತು. ಅದನ್ನು ವಿಸ್ತರಿಸದಿರಲು ನಿರ್ಧರಿಸಿದ ಕೇಂದ್ರ ಸರ್ಕಾರದ ಇದೇ ಸೌಲಭ್ಯವನ್ನು ಎನ್‌ಎಫ್‌ಎಸ್‌ಎ ಯೋಜನೆಯಲ್ಲಿ ನೀಡಲು ಮುಂದಾಗಿದೆ.

ಯೋಜನೆ ವರ್ಷಾಂತ್ಯದ ಕೊನೆಯವರೆಗೂ ಇರಲಿದ್ದು, ನಿಖರವಾದ ಫಲಾನುಭವಿಗಳಿಗೆ ಇದರ ಲಾಭ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಸೂಚಿಸಿದೆ. ಹೊಸ ಸಂಯೋಜಿತ ಯೋಜನೆಯು 5.33 ಲಕ್ಷ ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತ ಆಹಾರ ಧಾನ್ಯ ವಿತರಣೆಯಾಗಲಿದೆ.

ಎನ್​ಎಫ್​ಎಸ್​ಎ ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ನೀಡಲಾಗುತ್ತಿರುವ ಪಡಿತರದ ಸಾಕಷ್ಟು ಆಹಾರ ಧಾನ್ಯಗಳ ದಾಸ್ತಾನಿದೆ. 159 ಲಕ್ಷ ಟನ್ ಗೋಧಿ, 104 ಲಕ್ಷ ಟನ್ ಅಕ್ಕಿ ಲಭ್ಯವಿದೆ. ಜನರ ಬೇಡಿಕೆಯನ್ನು ಪೂರೈಸಲಾಗುವುದು ಎಂದು ಆಹಾರ ಸಚಿವಾಲಯ ತಿಳಿಸಿದೆ.

ಇತ್ತೀಚೆಗೆ ಕೇಂದ್ರ ಸಂಪುಟದಲ್ಲಿ ಮಹತ್ವದ ನಿರ್ಧಾರ: ಡಿಸೆಂಬರ್ 23 ರಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಬಡವರಿಗೆ ಒಂದು ವರ್ಷದವರೆಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲು ನಿರ್ಧರಿಸಲಾಗಿತ್ತು. ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಈ ಕಾಯ್ದೆಯಡಿ ಸಿಗಲಿದೆ. ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ಪ್ರತಿ ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯಲಿವೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ ಬಡವರಿಗೆ ಒಂದು ಕೆಜಿ ಅಕ್ಕಿಯನ್ನು 3 ರೂ.ಗೆ ಮತ್ತು ಗೋಧಿ 2 ರೂ.ಗೆ ಲಭ್ಯವಾಗಲಿದೆ.

ಇದನ್ನೂ ಓದಿ: ಆಹಾರ ಕಾಯ್ದೆಯಡಿ ಬಡವರಿಗೆ 1 ವರ್ಷದವರೆಗೆ ಉಚಿತ ಪಡಿತರ ಕೇಂದ್ರದ ನಿರ್ಧಾರ

Last Updated : Jan 1, 2023, 9:04 AM IST

ABOUT THE AUTHOR

...view details