ಜೈಪುರ (ರಾಜಸ್ಥಾನ) :ರಾಜಸ್ಥಾನದಲ್ಲಿ ಕಾಂಗ್ರೆಸ್ ತನ್ನ ಅಧಿಕಾರ ಉಳಿಸಿಕೊಂಡರೆ, 2024ರಲ್ಲಿ ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಕಾಂಗ್ರೆಸ್ನ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಆರೋಪಿಸಿದ ಖರ್ಗೆ, ಈ ರೀತಿ ಮಾಡುವ ಮೂಲಕ ಕೇಸರಿ ಪಕ್ಷವು ಕಾಪಿರೈಟ್ ಪಡೆಯಲು ಬಯಸುತ್ತಿದೆ, ಆದರೆ ಜನ ಅದಕ್ಕೆ ಯಾವುದೇ ಕಾಪಿರೈಟ್ ನೀಡುವುದಿಲ್ಲ ಎಂದು ಹೇಳಿದರು.
ಬರಾನ್ ಜಿಲ್ಲೆಯಲ್ಲಿ ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್ಸಿಪಿ)ಯ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ತಮ್ಮ ಇತ್ತೀಚಿನ ಭಾಷಣಗಳಲ್ಲಿ ಕೆಂಪು ಡೈರಿ ಬಗ್ಗೆ ಮಾತನಾಡಿದ್ದಾರೆ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರದ ಹಣಕಾಸು ಅಕ್ರಮಗಳ ಬಗ್ಗೆ ಇದರಲ್ಲಿ ಲೆಕ್ಕವಿದೆ ಎಂದು ಅವರು ಹೇಳಿದ್ದಾರೆ. ಆದರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅದೇ ರೆಡ್ ಡೈರಿಯಲ್ಲಿ ಬರೆಯಲಾಗಿದೆ ಎಂದು ಖರ್ಗೆ ಲೇವಡಿ ಮಾಡಿದರು.
ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 2024 ರಲ್ಲಿ ಪಕ್ಷವು ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಖರ್ಗೆ ಪ್ರತಿಪಾದಿಸಿದರು. 2019 ರ ಲೋಕಸಭಾ ಚುನಾವಣೆಯಲ್ಲಿ ಜನ ರಾಜಸ್ಥಾನದಿಂದ 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ್ದರು. ಆದರೆ ಈ ಸಂಸದರಿಗೆ ಕೇಂದ್ರದಿಂದ ಅನುದಾನ ಅಥವಾ ನೀರು ಯಾವುದನ್ನೂ ತರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಪ್ರಧಾನಿ ಮತ್ತು ರಾಜಸ್ಥಾನದ ಬಿಜೆಪಿ ಸಂಸದರು ರಾಜ್ಯದ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಅವರು ಆರೋಪಿಸಿದರು.