ಮಿರ್ಜಾಪುರ (ಉತ್ತರ ಪ್ರದೇಶ) : ಕೂಲಿ ಕಾರ್ಮಿಕರೊಬ್ಬರ ಮಗನಿಗೆ ತಹಶೀಲ್ದಾರ್ ಕಚೇರಿ ವತಿಯಿಂದ 2.40 ಕೋಟಿ ರೂ. ಗಳ ಬೃಹತ್ ಆದಾಯ ಪ್ರಮಾಣ ಪತ್ರ ವಿತರಿಸಲಾಗಿದೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕ ವಯಲದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಕ್ಕ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ಹೌದು, ಕೂಲಿ ಕಾರ್ಮಿಕನ ಮಗ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ನಲ್ಲಿ ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಗ್ರಾಮ ಲೆಕ್ಕಿಗರ ನಿರ್ಲಕ್ಷ್ಯದಿಂದ ಅಧಿಕ ಆದಾಯದ ಪ್ರಮಾಣ ಪತ್ರ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್, ಆದಾಯ ಪ್ರಮಾಣ ಪತ್ರ ರದ್ದುಗೊಳಿಸಿದ್ದಾರೆ. ಮತ್ತೊಮ್ಮೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ :ಆದಾಯ ಪ್ರಮಾಣ ಪತ್ರಕ್ಕಾಗಿ ಲಂಚ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್
ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಅತ್ಯಂತ ಹಿಂದುಳಿದ ಬ್ಲಾಕ್ ಹಲಿಯಾ ಸಹಜಿ ಗ್ರಾಮದ ನಿವಾಸಿ ಹಾಗೂ ಕೂಲಿ ಕಾರ್ಮಿಕ ರಾಮದಾಸ್ ಅವರ ಪುತ್ರ ಬ್ರಿಜೇಶ್ ಕುಮಾರ್ ಆಗ್ರಾದಲ್ಲಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಸಹಜಿ ಗ್ರಾಮದ ಲೆಕ್ಕಾಧಿಕಾರಿ ಪತ್ರದಲ್ಲಿ ವಾರ್ಷಿಕ 2.40 ಕೋಟಿ ರೂ. ಆದಾಯ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ತಹಶೀಲ್ದಾರ್ ಆಶಿಶ್ ಕುಮಾರ್ ಪಾಂಡೆ ಅವರ ಡಿಜಿಟಲ್ ಸಹಿಯೊಂದಿಗೆ ವಿದ್ಯಾರ್ಥಿ, ಈ ಪ್ರಮಾಣಪತ್ರವನ್ನು ಪಡೆದಿದ್ದು, ವಿಷಯ ತಿಳಿದ ಮನೆಯವರು ಆತಂಕಗೊಂಡಿದ್ದರು. ಘಟನೆ ಬೆಳಕಿಗೆ ಬಂದ ನಂತರ ತಹಶೀಲ್ದಾರ್ ಅವರು ವಿದ್ಯಾರ್ಥಿಯ ಪ್ರಮಾಣಪತ್ರವನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗೆ ಮನವಿ ಮಾಡಲಾಗಿದೆ.