ಕರ್ನಾಟಕ

karnataka

By

Published : Apr 17, 2023, 9:30 AM IST

ETV Bharat / bharat

'ಮಹಾರಾಷ್ಟ್ರ ಭೂಷಣ್' ಪ್ರಶಸ್ತಿ ಸಮಾರಂಭ: ಬಿಸಿಲಿನ ಝಳಕ್ಕೆ 11 ಮಂದಿ ಬಲಿ, 600ಕ್ಕೂ ಹೆಚ್ಚು ಜನ ಅಸ್ವಸ್ಥ

ಮಹಾರಾಷ್ಟ್ರದ ನವಿ ಮುಂಬೈನಲ್ಲಿ ರಾಜ್ಯ ಸರ್ಕಾರದ ವತಿಯಿಂದ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರಿ ದುರಂತ ಸಂಭವಿಸಿದೆ. ಸುಡುವ ಬಿಸಿಲಿನಲ್ಲಿಯೇ ಸಾವಿರಾರು ಜನ ಕಾರ್ಯಕ್ರಮ ವೀಕ್ಷಿಸಿದ್ದು, ಇದೇ ವೇಳೆ 11 ಮಂದಿ ಸಾವನ್ನಪ್ಪಿ, ನೂರಾರು ಜನ ಅಸ್ವಸ್ಥರಾಗಿದ್ದಾರೆ.

Maharashtra Bhushan Award ceremony
ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭ

ಮುಂಬೈ (ಮಹಾರಾಷ್ಟ್ರ):ನವಿ ಮುಂಬೈನ ಖಾರ್ಘರ್‌ನಲ್ಲಿ ನಡೆದ 'ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ'ಪ್ರದಾನ ಸಮಾರಂಭದ ವೇಳೆ ಬಿಸಿಲಿನ ತಾಪದಿಂದ ಒಟ್ಟು 11 ಜನರು ಸಾವನ್ನಪ್ಪಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ನಂತರ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಮೃತರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಚಿಕಿತ್ಸೆ ಪಡೆಯುತ್ತಿರುವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ನಾಗರಿಕರ ಸಮಾಜ ಸೇವೆ ಪರಿಗಣಿಸಿ ಮಹಾರಾಷ್ಟ್ರ ಭೂಷಣ್​ ಪ್ರಶಸ್ತಿಯನ್ನು ನೀಡುತ್ತದೆ. ಅದರಂತೆ ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ್‌ ಯಾನೆ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ಹೀಗೆ ಕಾರ್ಯಕ್ರಮ ನಡೆಯುವಾಗಲೇ ಸುಡುವ ಬಿಸಿಲಿನಿಂದಾಗಿ ದುರಂತ ನಡೆದಿದೆ.

ನವಿ ಮುಂಬೈನ ಬೃಹತ್‌ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಟೆಂಟ್‌ ಹಾಕದ ಕಾರಣ ಸಾವಿರಾರು ಜನ ಬಿಸಿಲಿನಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಬೇಕಾಯಿತು. ಅದರಲ್ಲೂ, ದತ್ತಾತ್ರೇಯ ನಾರಾಯಣ್‌ ಅವರ ಸಾವಿರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಳಗ್ಗೆ 11.30ಕ್ಕೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಯವರೆಗೂ ನಡೆಯಿತು. ಹಾಗಾಗಿ 38 ಡಿಗ್ರಿ ಸೆಲ್ಸಿಯಸ್‌ ತಾಪಮಾನವು ಜನರನ್ನು ಬಸವಳಿಯುವಂತೆ ಮಾಡಿದೆ. ಆಯಾಸ ಹಾಗೂ ನಿರ್ಜಲೀಕರಣದಿಂದ ಜನ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

5 ಲಕ್ಷ ರೂ.ಪರಿಹಾರ ಘೋಷಣೆ:ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮಹಾರಾಷ್ಟ್ರ ಸರ್ಕಾರ ತಲಾ 5 ಲಕ್ಷ ರೂಪಾಯಿ ಘೋಷಿಸಿದೆ. ಅಸ್ವಸ್ಥರಾದ ನೂರಾರು ಜನರನ್ನು ನವಿ ಮುಂಬೈನ ಕಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತ ಸಂಭವಿಸಿದ ಹಿನ್ನೆಲೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಸರ್ಕಾರದಿಂದ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

"ಇದು ಅತ್ಯಂತ ಅನಿರೀಕ್ಷಿತ ಮತ್ತು ನೋವಿನ ಸಂಗತಿ. ಮೃತರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಕುಟುಂಬದವರ ದುಃಖದಲ್ಲಿ ಭಾಗಿಯಾಗುತ್ತೇವೆ. ಈ ಘಟನೆಯ ಬಗ್ಗೆ ನನಗೆ ಮಾಹಿತಿ ದೊರೆತ ತಕ್ಷಣ ನಾನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆಯುತ್ತಿರುವ ಜನರು ಮತ್ತು ಅಲ್ಲಿನ ವೈದ್ಯರೊಂದಿಗೆ ಮಾತನಾಡಿದೆ. ಆಸ್ಪತ್ರೆಗೆ ದಾಖಲಾದ ಜನರ ಚಿಕಿತ್ಸೆಯ ಬಗ್ಗೆ ನಾನೇ ನಿಗಾ ವಹಿಸಿದ್ದೇನೆ ಮತ್ತು ವೈದ್ಯರಿಗೆ ಸೂಕ್ತ ಸೂಚನೆ ನೀಡಿದ್ದೇನೆ. ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಶೀಘ್ರದಲ್ಲೇ ಸುಧಾರಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ದುರದೃಷ್ಟಕರ ಘಟನೆ: "ಮಹಾರಾಷ್ಟ್ರ ಭೂಷಣ್​ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಕೆಲವು ಸದಸ್ಯರು ಬಿಸಿಲಿನ ಬೇಗೆೆಯಿಂದ ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ. ಈವರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿಗಳನ್ನು ಅರ್ಪಿಸುತ್ತೇನೆ. ಅವರ ಕುಟುಂಬದ ದುಃಖದಲ್ಲಿ ನಾವು ಭಾಗಿ" ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಟ್ವೀಟ್ ಮಾಡಿದ್ದಾರೆ.

ಶಿಂಧೆ ಉತ್ತರ ನೀಡಬೇಕಿದೆ:"ಖಾರ್ಘರ್‌ನಲ್ಲಿ ಸರ್ಕಾರ ಆಯೋಜಿಸಿದ್ದ ಮಹಾರಾಷ್ಟ್ರ ಭೂಷಣ್​ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ 11 ಜನ ಜೀವ ಕಳೆದುಕೊಂಡ ಸುದ್ದಿ ಆತಂಕಕಾರಿಯಾಗಿದೆ. ತಾಪಮಾನ ತುಂಬಾ ಹೆಚ್ಚುತ್ತಿರುವಾಗ ಈ ಕಾರ್ಯಕ್ರಮವನ್ನು ಏಕೆ ಬಯಲಿನಲ್ಲಿ ನಡೆಸಲಾಯಿತು? ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಪ್ರಶ್ನಿಸಿದರು. ಅಲ್ಲದೇ ಇದಕ್ಕೆ ಸಿಎಂ ಶಿಂಧೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಯಲು ಪ್ರದೇಶದಲ್ಲಿ ಸಮಾರಂಭ ನಡೆದ ಕಾರಣ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪುತ್ರ ಆದಿತ್ಯ ಠಾಕ್ರೆ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಇನ್ನು ಕಾರ್ಯಕ್ರಮದ ಆಯೋಜನೆಯಿಂದ ಉಂಟಾದ ಅಚಾತುರ್ಯದ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ:ಮೋದಿ ವಿರುದ್ಧ ಸ್ಪರ್ಧಿಸಿ 855 ವೋಟ್‌ ಪಡೆದಿದ್ದ ಅತೀಕ್ ಅಹ್ಮದ್; ಈತನ ಮೇಲಿತ್ತು 101 ಪ್ರಕರಣ!

ABOUT THE AUTHOR

...view details