ಕರ್ನಾಟಕ

karnataka

ಮರಾಠಾ ಮೀಸಲಾತಿ ಹೋರಾಟ ತೀವ್ರ: ಪ್ರತಿಭಟನಾಕಾರರ ಮೇಲಿನ ಪ್ರಕರಣ ಕೈಬಿಡಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

By PTI

Published : Sep 12, 2023, 1:46 PM IST

ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಮರಾಠಾ ಸಮುದಾಯದ ಹೋರಾಟಗಾರರ ಮೇಲಿದ್ದ ಕೇಸುಗಳನ್ನು ಹಿಂಪಡೆಯುವುದಾಗಿ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿದ್ದಾರೆ.

Maratha reservation struggle
Maratha reservation struggle

ಮುಂಬೈ:ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಮರಾಠಾ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಭರವಸೆ ನೀಡಿದ್ದಾರೆ. ಸೆಪ್ಟೆಂಬರ್ 1ರಂದು ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ನಡೆದ ಹೋರಾಟದಲ್ಲಿ ನಿರತರಾಗಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಅನೇಕ ಹೋರಾಟಗಾರರ ಮೇಲೆ ಎಫ್‌ಐಆರ್‌ ದಾಖಲಿಸಿದ್ದರು. ಲಾಠಿ ಚಾರ್ಜ್​ ಮಾಡಿರುವ ಪೊಲೀಸ್​ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಮತ್ತು ಮರಾಠಿ ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

ಘಟನೆಯ ಹಿನ್ನೆಲೆ:ಮರಾಠಾ ಸಮುದಾಯಕ್ಕೆ ಒಬಿಸಿ ವರ್ಗದಡಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಆಗಸ್ಟ್ 29ರಿಂದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಉಪವಾಸನಿರತ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಪ್ರತಿಭಟನಾಕಾರರು ನಿರಾಕರಿಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಅಶ್ರುವಾಯು ಶೆಲ್‌ಗಳನ್ನೂ ಸಿಡಿಸಿದ್ದರು. ಹಿಂಸಾಚಾರದಲ್ಲಿ 40 ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದರು. 15ಕ್ಕೂ ಹೆಚ್ಚು ಸರ್ಕಾರಿ ಬಸ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಹೀಗಾಗಿ ಹಲವು ಹೋರಾಟಗಾರರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತಿದ್ದಂತೆ ಎಚ್ಚೆತ್ತ ಸರ್ಕಾರ, ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪೊಲೀಸ್ ಕೇಸ್​ಗಳನ್ನು ಹಿಂಪಡೆಯಲು ತೀರ್ಮಾನಿಸಿದೆ. ಈ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಶಿಂಧೆ ಸುದ್ದಿಗಾರರಿಗೆ ತಿಳಿಸಿದರು.

ಸಿಎಂ ಜೊತೆ ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಪಕ್ಷಗಳು ಜಾರಂಜ್ ಅವರ ಉಪವಾಸವನ್ನು ಹಿಂಪಡೆಯಲು ವಿನಂತಿಸುವ ನಿರ್ಣಯವನ್ನು ಅಂಗೀಕರಿಸಿದವು ಎಂದು ಶಿಂಧೆ ಪ್ರಕಟಿಸಿದರು. ಮಹಾರಾಷ್ಟ್ರ ಪ್ರಗತಿಪರ ರಾಜ್ಯವಾಗಿದೆ. ನಾವು ಎಲ್ಲಾ ಸಮುದಾಯಗಳ ನಡುವೆ ಸಾಮರಸ್ಯ ಮತ್ತು ಶಾಂತಿಯನ್ನು ಬಯಸುತ್ತೇವೆ ಎಂದು ಹೇಳಿದರು.

ಮೀಸಲಾತಿ ಕಾರ್ಯಕರ್ತ ಮನೋಜ್ ಜಾರಂ ಅವರ ಉಪವಾಸ ಹಿಂಪಡೆಯಲು ಎಲ್ಲಾ ಪಕ್ಷಗಳು ನಿರ್ಣಯ ಅಂಗೀಕರಿಸಿವೆ. ಉಪವಾಸ ಕೈಬಿಡುವಂತೆ ನಾನು ವೈಯಕ್ತಿಕವಾಗಿ ವಿನಂತಿಸುತ್ತೇನೆ. ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ನಿರ್ಧಾರಗಳನ್ನು, ಅದರ ಕಾರ್ಯವಿಧಾನವನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಸಮಯ ಬೇಕಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಐವರು ಸದಸ್ಯರ ಸಮಿತಿ ರಚನೆ:ನಿಜಾಮರ ಕಾಲದ ದಾಖಲೆಗಳಲ್ಲಿ ಕುಂಬಿಗಳು ಎಂದು ಉಲ್ಲೇಖಿಸಲಾದ ಮರಾಠಾ ಸಮುದಾಯದ ಸದಸ್ಯರಿಗೆ ಜಾತಿ ಪ್ರಮಾಣಪತ್ರ ನೀಡಲು ಕಾನೂನು ಮತ್ತು ಆಡಳಿತಾತ್ಮಕ ಚೌಕಟ್ಟು ಸೇರಿದಂತೆ ಪ್ರಮಾಣಿತ ಕಾರ್ಯ ವಿಧಾನ (ಎಸ್‌ಒಪಿ) ನಿರ್ಧರಿಸಲು ನಿವೃತ್ತ ನ್ಯಾಯಾಧೀಶ ಸಂದೀಪ್ ಶಿಂಧೆ ನೇತೃತ್ವದ ಐವರು ಸದಸ್ಯರ ಸಮಿತಿ ರಚಿಸಲಾಗಿದೆ.

ಇದು ಮರಾಠಾವಾಡ ಪ್ರದೇಶದ ಮರಾಠರಿಗೆ ಒಬಿಸಿ ವರ್ಗದಡಿಯಲ್ಲಿ ಮೀಸಲಾತಿ ಪ್ರಯೋಜನ ಪಡೆಯಲು ಅನುಮತಿಸುತ್ತದೆ. ರಾಜ್ಯ ಸರ್ಕಾರ ರಚಿಸಿರುವ ಸಮಿತಿ ಕಾರ್ಯಪ್ರವೃತ್ತವಾಗಿದ್ದು, ಪೂರ್ಣಗೊಳಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ನ್ಯಾಯಮೂರ್ತಿ ಶಿಂಧೆ ಸಮಿತಿಯು ತನ್ನ ಮೊದಲ ಸಭೆ ನಡೆಸಿದ್ದು, ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದರು.

ಮರಾಠರಿಗೆ ಮೀಸಲಾತಿ ನೀಡಬಾರದು- ಒಬಿಸಿ ಮಹಾಸಂಘ ಕಾರ್ಯಕರ್ತರ ಪ್ರತಿಭಟನೆ:ಇನ್ನೊಂದೆಡೆ, ಮರಾಠರಿಗೆ ಒಬಿಸಿ ವರ್ಗದಡಿ ಕೋಟಾ ನೀಡಬಾರದು ಎಂದು ಆಗ್ರಹಿಸಿ ರಾಷ್ಟ್ರೀಯ ಒಬಿಸಿ ಮಹಾಸಂಘ ಕಾರ್ಯಕರ್ತರು ಚಂದ್ರಾಪುರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಚಂದ್ರಾಪುರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು ರಾಷ್ಟ್ರೀಯ ಒಬಿಸಿ ಮಹಾಸಂಘದ ಕೆಲವು ಕಾರ್ಯಕರ್ತರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಸಂಘದ ಪದಾಧಿಕಾರಿಗಳು ರಾಜ್ಯ ಸರ್ಕಾರವು 'ಜಾತಿ ಗಣತಿ' ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಒಬಿಸಿಗಳ ಮೀಸಲಾತಿ ಮುಟ್ಟದೇ ಮರಾಠರಿಗೆ ಮೀಸಲಾತಿ ನೀಡಿ : ಶರದ್​ ಪವಾರ್

ABOUT THE AUTHOR

...view details