ಕರ್ನಾಟಕ

karnataka

By ETV Bharat Karnataka Team

Published : Aug 28, 2023, 4:10 PM IST

ETV Bharat / bharat

ಮಣಿಪುರದಲ್ಲಿ ನಾಳೆ ತುರ್ತು ವಿಧಾನಸಭೆ ಅಧಿವೇಶನ: 3,662 ಮಂದಿ ವಶಕ್ಕೆ, ಶಸ್ತ್ರಾಸ್ತ್ರ, ಸ್ಫೋಟಕಗಳು ಜಪ್ತಿ

Manipur Assembly session: ಮಣಿಪುರದಲ್ಲಿ ನಾಳೆ ತುರ್ತು ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು 3,662 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಣಿಪುರ
ಮಣಿಪುರ

ಇಂಫಾಲ (ಮಣಿಪುರ) : ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಕೊಂಚ ಸುಧಾರಿಸುತ್ತಿದೆ. ಆದರೂ, ರಾಜ್ಯದ ಅಲ್ಲಲ್ಲಿ ಘರ್ಷಣೆಗಳು ಮುಂದುವರಿದಿವೆ. ನಾಳೆ (ಮಂಗಳವಾರ) ತುರ್ತು ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಮತ್ತು ಭದ್ರತಾ ಪಡೆಗಳು ಕಳೆದ 24 ಗಂಟೆಗಳ ಅವಧಿಯಲ್ಲಿ 30 ಶಸ್ತ್ರಾಸ್ತ್ರಗಳು, 16 ಭಾರಿ ಸ್ಫೋಟಕಗಳನ್ನು ಜಪ್ತಿ ಮಾಡಿದ್ದು, 3,662 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಗುಡ್ಡಗಾಡು ರಾಜ್ಯದ ಹಲವಾರು ಪ್ರದೇಶಗಳಲ್ಲಿ ಸಣ್ಣಪುಟ್ಟ ಹಿಂಸಾಚಾರಗಳು ಮುಂದುವರಿದಿವೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ಭಾನುವಾರ ಐದು ಮನೆಗಳಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಭದ್ರತಾ ಸಿಬ್ಬಂದಿಯ ಮೂರು ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ. ನಂತರ ಮಣಿಪುರ ಪೊಲೀಸರು ಕೇಂದ್ರ ಭದ್ರತಾ ಪಡೆಗಳೊಂದಿಗೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು. ರಾಜ್ಯದಲ್ಲಿ ಸಂಘರ್ಷದ ನಡುವೆಯೂ ರಾಜ್ಯಪಾಲರು ತುರ್ತು ವಿಧಾನಸಭೆ ಅಧಿವೇಶನವನ್ನು ಕರೆದಿದ್ದಾರೆ. ಶಾಂತ ಅಧಿವೇಶನಕ್ಕಾಗಿ ಪೊಲೀಸರು ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ, ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಜನರನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಸ್ಫೋಟಕಗಳ ತಪಾಸಣೆ

127 ಚೆಕ್​ಪೋಸ್ಟ್​ ಸ್ಥಾಪನೆ:ಕಳೆದ 24 ಗಂಟೆಗಳಲ್ಲಿ ಇಂಫಾಲ ಪೂರ್ವ, ಇಂಫಾಲ ಪಶ್ಚಿಮ, ಕಕ್ಚಿಂಗ್, ತೌಬಲ್, ಕಾಂಗ್‌ಪೋಕ್ಪಿ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 16 ಶಸ್ತ್ರಾಸ್ತ್ರಗಳು, 70 ಬುಲೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬೆಟ್ಟಗಳು ಮತ್ತು ಕಣಿವೆಗಳಲ್ಲಿ ಒಟ್ಟು 127 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಕಾನೂನು ಉಲ್ಲಂಘನೆ ತಡೆಗೆ 2,257 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಲೂಟಿಯಾದ ಶಸ್ತ್ರಾಸ್ತ್ರಗಳು ವಶಕ್ಕೆ:ಬಿಷ್ಣುಪುರ್, ಕಾಕ್ಚಿಂಗ್, ತೌಬಲ್, ಚುರಾಚಂದ್‌ಪುರ ಮತ್ತು ಇಂಫಾಲ ಪಶ್ಚಿಮ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ. ಚುರಾಚಂದ್‌ಪುರ ಜಿಲ್ಲೆಯೊಂದರಲ್ಲಿ ಲೂಟಿಗೈದ 7 ಶಸ್ತ್ರಾಸ್ತ್ರಗಳು ಮತ್ತು 111 ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಪಾಸಣೆಯ ವೇಳೆ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ. ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಗೃಹರಕ್ಷಕ ದಳದಿಂದ ದುಷ್ಕರ್ಮಿಗಳು ಲೂಟಿ ಮಾಡಿದ ಮೂರು ಶಸ್ತ್ರಾಸ್ತ್ರಗಳು ಮತ್ತು 105 ಮದ್ದುಗುಂಡುಗಳನ್ನು ಮರಳಿ ಪಡೆಯಲಾಗಿದೆ. ಕಾನೂನು ಉಲ್ಲಂಘನೆ ಆರೋಪದ ಮೇಲೆ 1405 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ವಾಹನಗಳ ತಪಾಸಣೆ

ಮೇ 3ರಿಂದ ಮಣಿಪುರ ರಾಜ್ಯಾದ್ಯಂತ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದೆ. ನಿನ್ನೆಯಷ್ಟೇ (ಆಗಸ್ಟ್​ 27) ಇಂಫಾಲ ಪೂರ್ವ ಜಿಲ್ಲೆಯ ದುಷ್ಕರ್ಮಿಗಳು ಐದು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಭದ್ರತಾ ಪಡೆಗಳ ನಡುವೆ ಘರ್ಷಣೆ ಕೂಡ ನಡೆದಿತ್ತು. ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲಾಗಿತ್ತು.

ಇದನ್ನೂ ಓದಿ:Manipur violence: ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ.. ಮನೆಗಳಿಗೆ ಬೆಂಕಿ, ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರ ಲೂಟಿ

ABOUT THE AUTHOR

...view details