ಕೋಲ್ಕತ್ತಾ(ಪಶ್ಚಿಮ ಬಂಗಾಳ):ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಬಾಲಕಿ ಸಾವನ್ನಪ್ಪಿದ್ದಾಳೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಟಿಎಂಸಿ ನಾಯಕನ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಶವಪರೀಕ್ಷೆ ನಡೆಸದೇ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂತ್ರಸ್ತೆಯ ತಂದೆ, 'ಬರ್ತ್ಡೇ ಪಾರ್ಟಿಯಲ್ಲಿ ಭಾಗಿಯಾಗಿ ವಾಪಸ್ ಆದ ಮಗಳ ದೇಹದಲ್ಲಿ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಹೊಟ್ಟೆನೋವಿನಿಂದಲೂ ಬಳಲುತ್ತಿದ್ದಳು. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಆಕೆ ಸಾವನ್ನಪ್ಪಿದ್ದಾಳೆ' ಎಂದು ತಿಳಿಸಿದ್ದಾರೆ. ಕೃತ್ಯದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡನ ಮಗನ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದು, ಆತ ಒತ್ತಡ ಹಾಕಿದ್ದಕ್ಕಾಗಿ ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಹೇಳಲಾಗಿದೆ.