ನಾಂದೇಡ್ (ಮಹಾರಾಷ್ಟ್ರ):ಅಕ್ಟೋಬರ್ 1 ರಂದು ನಾಂದೇಡ್ನಲ್ಲಿರುವ ಡಾ. ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರು. ಮತ್ತೆ ಅಕ್ಟೋಬರ್ 2 ರಂದು ಇದೇ ಆಸ್ಪತ್ರೆಯಲ್ಲಿ 7 ರೋಗಿಗಳು ಮೃತಪಟ್ಟಿದ್ದಾರೆ. ಪ್ರಸ್ತುತ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಂದೇಡ್ನ ಡಾ. ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನದಲ್ಲಿ ರೋಗಿಗಳ ಹೆಚ್ಚಳವಾಗಿದೆ.
ಆಸ್ಪತ್ರೆಯಲ್ಲಿ 76 ರೋಗಿಗಳ ಸ್ಥಿತಿ ಗಂಭೀರ:ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಪ್ರಸ್ತುತ ಈ ಆಸ್ಪತ್ರೆಯಲ್ಲಿ 76 ರೋಗಿಗಳ ಸ್ಥಿತಿ ಗಂಭೀರವಾಗಿದೆ. ಸದ್ಯ ಸಾವಿನ ಸಂಖ್ಯೆಯು 31ಕ್ಕೆ ತಲುಪಿದೆ. ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 1ರ ವರೆಗೆ 24 ರೋಗಿಗಳು ಸಾವಿಗೀಡಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ 12 ನವಜಾತ ಶಿಶುಗಳು ನಾಂದೇಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿವೆ. ಹಾವು ಕಡಿತ, ವಿಷ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿರುವ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಈ ಕುರಿತು ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗುವುದು. ಈ ಸಮಿತಿಯು ಆಸ್ಪತ್ರೆಗೆ ತೆರಳಿ, ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರವೇ ಹೊಣೆ- ಮಾಜಿ ಸಿಎಂ ಅಶೋಕ್ ಚವಾಣ್ ಆರೋಪ:ನಾಂದೇಡ್ನಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ನಿನ್ನೆಯಿಂದ 7 ಮಂದಿ ರೋಗಿಗಳು ದುರದೃಷ್ಟವಶಾತ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ. ರಾಜ್ಯ ಸರ್ಕಾರವೇ ಈ ಹೊಣೆಯನ್ನು ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಒತ್ತಾಯಿಸಿದರು.