ಜನಗಾಮ (ತೆಲಂಗಾಣ): ವೈದ್ಯರ ಅನುಪಸ್ಥಿತಿಯಲ್ಲಿ ನರ್ಸ್ ಒಬ್ಬರು ಮಹಿಳೆಗೆ ಸಿಸೇರಿಯನ್ ಮಾಡಿದ ಪರಿಣಾಮ ಮಗು ಸಾವನ್ನಪ್ಪಿರುವುದಾಗಿ ಮಹಿಳೆಯ ಕುಟುಂಬಸ್ಥರು ಆರೋಪಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ನರ್ಸ್ ನೇತೃತ್ವದಲ್ಲಿ ಹೆರಿಗೆ ನಡೆಸಿದ ಪರಿಣಾಮ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಲಾಗಿದೆ.
ಬುಧವಾರ ಹೆರಿಗೆ ನೋವಿನ ಹಿನ್ನೆಲೆ ದರ್ದೆಪಲ್ಲಿ ಗ್ರಾಮದ ಮಹಿಳೆಯೊಬ್ಬರನ್ನು ಜನಗಾಮ ಜಿಲ್ಲೆಯ ಪಾಲಕುರ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆ ಸಿಬ್ಬಂದಿಗಳು ಮಹಿಳೆಗೆ ಸಾಮಾನ್ಯ ಹೆರಿಗೆ ಆಗುತ್ತದೆ ಎಂದು ಹೇಳಿದ್ದರು. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಯಲ್ಲಿ ಉಳಿಸಿಕೊಂಡಿದ್ದರು.
ಬುಧವಾರ ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ಮಹಿಳೆಗೆ ಹೆರಿಗೆ ನೋವು ಹೆಚ್ಚಾಗಿದೆ. ತಕ್ಷಣ ಮಹಿಳೆಯನ್ನು ಚಿಕಿತ್ಸೆಗೆಂದು ಚಿಕಿತ್ಸಾ ಕೊಠಡಿಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಈ ಸಂದರ್ಭದಲ್ಲಿ ಮಹಿಳೆಗೆ ಹೆರಿಗೆ ಮಾಡಬೇಕಾದ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ ಎಂದು ಮಹಿಳೆಯ ಕುಟುಂಬಸ್ಥರು ತಿಳಿಸಿದ್ದಾರೆ. ಕರ್ತವ್ಯದಲ್ಲಿ ಇರಬೇಕಾದ ಡಾ. ಸ್ವಪ್ನ ಅವರು ಆಸ್ಪತ್ರೆಯಲ್ಲಿ ಇರಲಿಲ್ಲ ಎಂದು ಆರೋಪಿಸಿದ್ದಾರೆ.