ಕರ್ನಾಟಕ

karnataka

By ETV Bharat Karnataka Team

Published : Sep 5, 2023, 6:33 PM IST

ETV Bharat / bharat

ರಾಹುಲ್​ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಕೆ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ :ಕಾಂಗ್ರೆಸ್ ಮಾಜಿ​ ಅಧ್ಯಕ್ಷ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ. ಕಾನೂನಿನ ಕಾರ್ಯಾಚರಣೆಯಲ್ಲಿ ಒಮ್ಮೆ ಸಂಸತ್ತಿನ ಸದಸ್ಯ ಸ್ಥಾನವನ್ನು ಹಾಗೂ ರಾಜ್ಯ ಶಾಸಕಾಂಗದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡರೆ, ಅವರ ಮೇಲೆ ಹೊರಿಸಲಾದ ಆರೋಪಗಳಿಂದ ಖುಲಾಸೆಗೊಳ್ಳುವವರೆಗೂ ಅವರನ್ನು ಅನರ್ಹಗೊಳಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.

ಲಖನೌ ಮೂಲದ ವಕೀಲ ಹಾಗೂ ಅರ್ಜಿದಾರರಾದ ಅಶೋಕ್ ಪಾಂಡೆ ಅವರು, ಕಾನೂನಿನ ಪ್ರಕಾರ ತೀರ್ಪು ಹೊರ ಬಂದ ಬಳಿಕ ಅನರ್ಹಗೊಂಡ ವ್ಯಕ್ತಿಯೂ ಸಂಸತ್ತಿನ ಸದಸ್ಯ ಸ್ಥಾನದಲ್ಲಿ ಹಾಗೂ ರಾಜ್ಯ ಶಾಸಕಾಂಗದಲ್ಲಿ ತಮ್ಮ ಸ್ಥಾನವನ್ನು ಮುಂದುವರೆಸಲು ಅರ್ಹರಾಗುತ್ತಾರೆಯೇ? ಎಂಬುದನ್ನು ನಿರ್ಧರಿಸುವಂತೆ ಪೀಠಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ಆಗಸ್ಟ್​ 4 ರಂದು ಸುಪ್ರೀಂಕೊರ್ಟ್​ ತಡೆ ನೀಡಿತ್ತು. ಸೂರತ್​ ಕೆಳ ನ್ಯಾಯಾಲಯ ನೀಡಿದ ತೀರ್ಪಿನಿಂದ ರಾಹುಲ್ ಗಾಂಧಿ ತಮ್ಮ ಲೋಕಸಭಾ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಗರಿಷ್ಠ ಎರಡು ವರ್ಷ ಶಿಕ್ಷೆ ವಿಧಿಸಿರುವುದಕ್ಕೆ ಗುಜರಾತ್​ ನ್ಯಾಯಾಲಯದ ನ್ಯಾಯಾಧೀಶರು ಯಾವುದೇ ಕಾರಣಗಳನ್ನು ನೀಡಿರಲಿಲ್ಲ, ಹೀಗಾಗಿ ಪೀಠ, ಮುಂದಿನ ವಿಚಾರಣೆವರೆಗೂ ಶಿಕ್ಷೆಗೆ ಮಧ್ಯಂತರ ತಡೆ ನೀಡಿ ಆದೇಶ ನೀಡಿತ್ತು.

ಸುಪ್ರೀಂ ಕೋರ್ಟ್​ನ ತಡೆಯಾಜ್ಞೆಯ ನಂತರ ಆಗಸ್ಟ್​ 7ರಂದು ಲೋಕಸಭೆಯ ಕಾರ್ಯದರ್ಶಿ ಪುನಃ ರಾಹುಲ್ ಗಾಂಧಿಯವರ ಸಂಸತ್​ ಸದಸ್ಯತ್ವವನ್ನು ಮರು ಸ್ಥಾಪನೆ ಮಾಡಲಾಗಿತ್ತು. 2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾಡಿದ ಭಾಷಣದಲ್ಲಿ, ಕಳ್ಳರೆಲ್ಲರಿಗೂ ಮೋದಿ ಉಪನಾಮ ಏಕಿರುತ್ತದೆ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. ಈ ಹೇಳಿಕೆಯಿಂದ ಮೋದಿ ಸಮುದಾಯಕ್ಕೆ ಅವಮಾನವಾಗಿದೆ ಎಂದು ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಎಂಬವರು ಸೂರತ್‌ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ:Modi surname case: ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌, ರಾಹುಲ್‌ ಗಾಂಧಿ ಅವರನ್ನು ತಪ್ಪಿತಸ್ಥ ಎಂದು ಘೋಷಣೆ ಮಾಡಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರ ಲೋಕಸಭಾ ಸದಸ್ಯತ್ವವನ್ನೂ ರದ್ದು ಮಾಡಲಾಗಿತ್ತು. ರಾಹುಲ್ ಗಾಂಧಿಯವರ ಹೇಳಿಕೆಯು ಪ್ರಧಾನಿ ನರೇಂದ್ರ ಮೋದಿ ಹಾಗೂ ಪರಾರಿಯಾದ ವ್ಯಾಪಾರಿ ನೀರವ್ ಮೋದಿ ಹಾಗೂ ಲಲಿತ್ ಮೋದಿಗೆ ಸೂಚ್ಯವಾಗಿ ಸಂಪರ್ಕ ಕಲ್ಪಿಸುತ್ತದೆ ಎಂದು ವ್ಯಾಖ್ಯಾನಿಸಲಾಗಿತ್ತು.

ಸೂರತ್‌ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಹುಲ್‌ ಗಾಂಧಿ ಅವರು ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕೆಳ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ತಡೆ ನೀಡಬೇಕು ಎಂದು ಕೋರಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ತಳ್ಳಿ ಹಾಕಿತ್ತು.

ಇದನ್ನೂ ಓದಿ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್​ ಪ್ರವೇಶ: ಲೋಕಸಭೆ ಸದಸ್ಯತ್ವ ಅನರ್ಹತೆ ವಾಪಸ್​​​

ABOUT THE AUTHOR

...view details