ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಮುಂದಿನ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ(ಆಗಸ್ಟ್ 9) ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಈ ಮೂಲಕ 19,500 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು 9.75 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸುತ್ತಾರೆ ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.
ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ಆರ್ಥಿಕ ಸಹಾಯ ನೀಡಲಾಗುತ್ತದೆ. ನಾಲ್ಕು ತಿಂಗಳಿಗೆ ಒಂದು ಬಾರಿ ಮೂರು ಕಂತುಗಳಲ್ಲಿ 2 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಈವರೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 1.38 ಲಕ್ಷ ಕೋಟಿ ರೂಪಾಯಿಯನ್ನು ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.