ನವದೆಹಲಿ:ದೇಶದಲ್ಲಿ 2ನೇ ಹಂತದ ಮಹಾಮಾರಿ ಕೊರೊನಾ ವೈರಸ್ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8ರಂದು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎರಡನೇ ಹಂತದ ವೈರಸ್ ವೇಗವಾಗಿ ಹರಡಲು ಶುರು ಮಾಡಿರುವ ಕಾರಣ ನರೇಂದ್ರ ಮೋದಿ ಮಾರ್ಚ್ 17ರಂದು ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಸಂವಾದ ನಡೆಸಿದ್ದರು. ಈ ವೇಳೆ ಕೋವಿಡ್ ಪ್ರಕರಣದ ಹೆಚ್ಚಳದ ಬಗ್ಗೆ ಜನರಲ್ಲಿ ಭಯ ಸೃಷ್ಟಿ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಟೆಸ್ಟ್, ಟ್ರೇಸ್, ಟ್ರ್ಯಾಕ್ ಮಂತ್ರದಿಂದ ಕೊರೊನಾ ಸೋಂಕನ್ನು ನಿಯಂತ್ರಿಸುವ ಅವಶ್ಯಕತೆ ಇದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಹೆಚ್ಚಿನ ಜನರು ಒಟ್ಟಾಗಿ ಒಂದೆಡೆ ಸೇರಿಕೊಳ್ಳದಂತೆ ನೋಡಿಕೊಳ್ಳಲು ಸೂಚಿಸಿದ್ದರು.