ನವದೆಹಲಿ:ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದ ಕಾರಣ ಕಳೆದ ಶುಕ್ರವಾರ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ಗೆ ಸ್ಥಳಾಂತರಗೊಂಡಿದ್ದರು. ಇದೀಗ ಅವರಿಗೆ ಯಶಸ್ವಿ ಬೈಪಾಸ್ ಸರ್ಜರಿ ಮಾಡಲಾಗಿದೆ. ಈ ವಿಷಯವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಏಮ್ಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಬೈಪಾಸ್ ಸರ್ಜರಿಗೊಳಗಾಗಿದ್ದಾರೆ ಎಂದು ತಿಳಿಸಿರುವ ರಕ್ಷಣಾ ಸಚಿವರು, ಏಮ್ಸ್ ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರಪತಿಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಸದ್ಯ ಕೋವಿಂದ್ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ಮಾಹಿತಿ ನೀಡಿದ್ದಾರೆ.