ನವದೆಹಲಿ: ಪ್ರತಿಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರತಿಪಕ್ಷಗಳ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಯಶವಂತ್ ಸಿನ್ಹಾ ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಲವಾರು ನಾಯಕರು ಹಾಗೂ ಕಾರ್ಯಕರ್ತರು ಯಶವಂತ್ ಸಿನ್ಹಾರಿಗೆ ಸಾಥ್ ನೀಡಿದರು.
ಓದಿ:ರಾಷ್ಟ್ರಪತಿ ಚುನಾವಣೆ: ಇಂದು ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ಜುಲೈ 18, 2022 ರಂದು ನಡೆಯಲಿರುವ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿತ್ತು. ಸಿನ್ಹಾ ಅವರು ಸಮರ್ಥ ಆಡಳಿತಗಾರ, ನಿಪುಣ ಸಂಸದೀಯ ಪಟು ಎಂಬ ಮೆಚ್ಚುಗೆ ಪಡೆದ ನಾಯಕರಾಗಿದ್ದಾರೆ. ಕೇಂದ್ರ ಸಚಿವರಾಗಿ ವಿವಿಧ ಖಾತೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಬಿಜೆಪಿ ತೊರೆದು ಟಿಎಂಸಿ ಪಕ್ಷ ಸೇರಿದ್ದ ಯಶ್ವಂತ್ ಸಿನ್ಹಾ, ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಆಗಿದ್ದರಿಂದ ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಸಿನ್ಹಾ ತಿಳಿಸಿದ್ದರು.