ನವದೆಹಲಿ :ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಮುಂಬೈ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ತಿಂಗಳಿಗೆ ನೂರು ಕೋಟಿ ರೂ. ಸಂಗ್ರಹ ಮಾಡುವಂತೆ ಪೊಲೀಸ್ ಅಧಿಕಾರಿಗೆ ಗುರಿ ನೀಡಲಾಗಿತ್ತು ಎಂದು ಮುಂಬೈ ನಗರದ ಮಾಜಿ ಪೊಲೀಸ್ ಆಯುಕ್ತ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಮುಂಬೈ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಕೂಡಾ ಆಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಮುಂಬೈ ಹೈಕೋರ್ಟ್ ಸಿಬಿಐ ತನಿಖೆಗೆ ವಹಿಸಿ ಆದೇಶ ನೀಡಿತ್ತು.
ಓದಿ : ಕೆಂಪುಕೋಟೆ ಹಿಂಸಾಚಾರ ಪ್ರಕರಣ: ನಟ ದೀಪ್ ಸಿಧು ವಿಚಾರಣೆ ಮುಂದೂಡಿದ ಕೋರ್ಟ್
ಮುಂಬೈ ಹೈಕೋರ್ಟ್ನ ಈ ಆದೇಶ ವಜಾ ಮಾಡಬೇಕೆಂದು ಕೋರಿ ಮಹಾರಾಷ್ಟ್ರ ಸರ್ಕಾರ ಮತ್ತು ಅನಿಲ್ ದೇಶಮುಖ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಜಸ್ಟೀಸ್ ಕೃಷ್ಣಾ ಕೌಲ್ ಮತ್ತು ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠ, ಮಹಾ ಸರ್ಕಾರದ ಅರ್ಜಿಯನ್ನ ವಜಾ ಮಾಡಿದೆ. ಆರೋಪದ ಸ್ವರೂಪವನ್ನು ನೋಡಿದರೆ, ಪ್ರಕರಣಕ್ಕೆ ತನಿಖೆಯ ಅವಶ್ಯಕತೆ ಇದೆ ಎಂದು ಅನಿಸುತ್ತಿದೆ. ಹೀಗಾಗಿ ಬಾಂಬೆ ಹೂಕೋರ್ಟ್ ನೀಡಿದ ತೀರ್ಪಿನಲ್ಲಿ ತಾವು ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ ಎಂದು ಕೋರ್ಟ್ ಹೇಳಿದೆ.
ಈ ಸಂಬಂಧ ಪರ- ವಿರೋಧದ ವಾದ ಆಲಿಸಿದ ಕೋರ್ಟ್ ಅಂತಿಮವಾಗಿ ದೇಶಮುಖ್ ಅವರ ಅರ್ಜಿಯನ್ನ ವಜಾ ಮಾಡಿತು. ದೇಶಮುಖ್ ಅವರು ರಾಜ್ಯ ಸರ್ಕಾರ ತನಿಖಾ ಆಯೋಗ ರಚನೆ ಮಾಡಿದ ವೇಳೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ಮಾಡಿದ ಮೇಲೆ ರಾಜೀನಾಮೆ ನೀಡಿದ್ದಾರೆ ಎಂಬ ಅಂಶವನ್ನು ಸುಪ್ರೀಂ ಗಮನಿಸಿತು. ಅಷ್ಟೇ ಅಲ್ಲ ಆರೋಪ ಮಾಡಿದವರು ಮುಂಬೈ ಪೊಲೀಸ್ ಆಯುಕ್ತರಾಗಿದ್ದವರು ಎಂಬುವುದನ್ನು ಸುಪ್ರೀಂಕೋರ್ಟ್ ಗಣನೆಗೆ ತೆಗೆದುಕೊಂಡಿದೆ. ಅನಿಲ್ ದೇಶಮುಖ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.