ಕರ್ನಾಟಕ

karnataka

ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ಅನಿರ್ದಿಷ್ಟಾವಧಿಗೆ ರಸ್ತೆ ತಡೆ ಮಾಡುವಂತಿಲ್ಲ: ಸುಪ್ರೀಂಕೋರ್ಟ್‌

By

Published : Oct 21, 2021, 1:05 PM IST

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ರೈಲು ಮಾರ್ಗ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸಿ ಹಲವು ಬಾರಿ ಧರಣಿ ನಡೆಸಿದ್ದಾರೆ. ಇದರ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ, ಆದ್ರೆ ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ನಿರ್ಬಂಧಿಸಲು ಅಲ್ಲ ಎಂದು ಕೋರ್ಟ್​ ಹೇಳಿದೆ.

ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ನವದೆಹಲಿ: ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರೈತ ಸಂಘಟನೆ ನೇತೃತ್ವದಲ್ಲಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ರೈಲು ಮಾರ್ಗ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸಿ ಹಲವು ಬಾರಿ ಧರಣಿ ನಡೆಸಿದ್ದಾರೆ. ಇದರ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ರೈಲು-ರಸ್ತೆ ಮಾರ್ಗಗಳಿಗೆ ಅಡ್ಡವಾಗಿ ಕುಳಿತಿರುವ ಪ್ರತಿಭಟನಾ ರೈತರು ಅಲ್ಲಿಂದ ಜಾಗ ಖಾಲಿ ಮಾಡುವಂತೆ ಅರ್ಜಿಯಲ್ಲಿ ಆಗ್ರಹಿಸಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್ ಮತ್ತು ಸಿ.ಟಿ.ರವಿಕುಮಾರ್ ಅವರ ನೇತೃತ್ವದ ನ್ಯಾಯಪೀಠವು, ಸಂಯುಕ್ತ ಕಿಸಾನ್ ಮೋರ್ಚಾಗೆ ರಸ್ತೆ ತಡೆಯುವ ಹಕ್ಕು ಇದೆಯೇ ಎಂದು ಪ್ರಶ್ನಿಸಿದೆ. ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಹೇಳಿದೆ.

ಇದನ್ನೂ ಓದಿ: ಪ್ರಯಾಣಿಕರಿಗೆ 'ರೈಲ್‌ ರೋಕೋ' ಬಿಸಿ : ಪಂಜಾಬ್ - ಹರಿಯಾಣದಲ್ಲಿ ಹಳಿ ಮೇಲೆ ಕುಳಿತು ರೈತರ ಪ್ರತಿಭಟನೆ

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಕೆಎಂ, ರಸ್ತೆ ನಿರ್ವಹಣೆಯನ್ನು ಪೊಲೀಸರು ಉತ್ತಮವಾಗಿ ಮಾಡಬಹುದು. ಅವರಿಗೆ ನಿರ್ವಹಿಸಲು ಸಾಧ್ಯವಾಗದಿದ್ದರೆ ರೈತರಿಗೆ ದೆಹಲಿಯ ರಾಮ್ ಲೀಲಾ ಮೈದಾನ ಅಥವಾ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡಬೇಕು ಎಂದು ತಿಳಿಸಿತು.

ಈ ಅರ್ಜಿಗೆ ಅಫಿಡವಿಟ್​ ಸಲ್ಲಿಸುವಂತೆ ರೈತ ಸಂಘಗಳಿಗೆ ಕೇಳಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಿದೆ.

ABOUT THE AUTHOR

...view details