ಕರ್ನಾಟಕ

karnataka

ETV Bharat / bharat

ಬಿಹಾರ ರಸ್ತೆ ಅಪಘಾತದಲ್ಲಿ ಸಾವಿನ ಸಂಖ್ಯೆ 12 ಕ್ಕೇರಿಕೆ; ಪರಿಹಾರ ಘೋಷಿಸಿದ ಪ್ರಧಾನಿ - ಟ್ರಕ್ ಅಪಘಾತ

ಭೀಕರ ರಸ್ತೆ ಅಪಘಾತ ಸಂಭವಿಸಿ 12 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ.

truck hits religious procession in bihar
ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ

By

Published : Nov 21, 2022, 7:25 AM IST

ಬಿಹಾರ: ವೈಶಾಲಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಧಾರ್ಮಿಕ ಮೆರವಣಿಗೆ ಸಾಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆಯೇ ಏಕಾಏಕಿ ನುಗ್ಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಬಿಹಾರ ಜಿಲ್ಲೆಯ ದೇಸ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂದರೆ, ರಾಜ್ಯ ರಾಜಧಾನಿಯಿಂದ ಸುಮಾರು 30 ಕಿಮೀ ದೂರದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಧಾರ್ಮಿಕ ಮೆರವಣಿಗೆ ಮೂಲಕ ತೆರಳಿ ದೇವರಿಗೆ ಪ್ರಾರ್ಥನೆ ಸಲ್ಲಿಸಲು ರಸ್ತೆಬದಿಯ ಅರಳಿ ಮರದ ಮುಂದೆ ಜಮಾಯಿಸಿದ್ದಾಗ ಅಪಘಾತ ಸಂಭವಿಸಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, 'ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತ ದುಃಖ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು' ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:ಪಾದಚಾರಿಗಳಿಗೆ ವೇಗವಾಗಿ ಬಂದು ಗುದ್ದಿದ ಟ್ರಕ್​: ಎಂಟು ಜನರ ದುರ್ಮರಣ

ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಸಂತಾಪ ಸೂಚಿಸಿದ್ದಾರೆ. ವೈಶಾಲಿ ಜಿಲ್ಲೆಯಲ್ಲಿ ಸಂಭವಿಸಿದ ದುರಂತ "ಅತ್ಯಂತ ನೋವಿನಿಂದ ಕೂಡಿದೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಮತ್ತು ಮೃತ ಸಂತ್ರಸ್ತರ ಕುಟುಂಬಕ್ಕೆ ನಿಯಮಾನುಸಾರ ತ್ವರಿತ ಪರಿಹಾರ ವಿತರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ವೈಶಾಲಿ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ಮಾತನಾಡಿ, "ಸುಲ್ತಾನ್‌ಪುರ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಗೆ ಸಂಬಂಧಿಸಿದ ಸಂಪ್ರದಾಯದ ಭಾಗವಾಗಿ ದೇವರಿಗೆ ಪೂಜೆ ಸಲ್ಲಿಸಲು ಮೆರವಣಿಗೆ ಮೂಲಕ ತೆರಳಲಾಗುತ್ತಿತ್ತು. ಆದ್ರೆ, ಚಾಲಕ ವೇಗವಾಗಿ ಬಂದಿದ್ದು ಟ್ರಕ್ ನಿಯಂತ್ರಣ ತಪ್ಪಿ, ಜನರ ಮೇಲೆಯೇ ನುಗ್ಗಿದೆ. ಮೃತಪಟ್ಟ 12 ಮಂದಿಯಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ" ಎಂದರು.

ABOUT THE AUTHOR

...view details