ಕರ್ನಾಟಕ

karnataka

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಯೋಜನೆ ರೂಪಿಸಿದ ಕೃಷಿ ಇಲಾಖೆ

By

Published : Jun 12, 2020, 10:09 PM IST

5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳು ಹಾಗೂ 22.10 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಯೋಜನೆ ರೂಪಿಸಿದೆ.

Department of Agriculture planned to supply sowing seed and fertilizer
Department of Agriculture planned to supply sowing seed and fertilizer

ಬೆಂಗಳೂರು : ರಾಜ್ಯದ ಎಲ್ಲೆಡೆ ಮುಂಗಾರು ಮಳೆ ಆರಂಭವಾಗಿದ್ದು, ಅದಕ್ಕೆ ತಕ್ಕಂತೆ ರಾಜ್ಯ ಕೃಷಿ ಇಲಾಖೆ ಈ ವರ್ಷದ ಮುಂಗಾರು ಹಂಗಾಮಿನಲ್ಲಿ 73 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದೆ.

ಅದಕ್ಕೆ ಅಗತ್ಯವಾದ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳು ಹಾಗೂ 22.10 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಯೋಜನೆ ರೂಪಿಸಿದೆ. ಮುಂಗಾರು ಪೂರ್ವದಲ್ಲಿ ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕಾರ್ಯ ಆರಂಭವಾಗಿದೆ.

ರಾಜ್ಯದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ಬಿತ್ತನೆ ಕಾರ್ಯ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಧಾವಿಸುತ್ತಿದ್ದಾರೆ. ರೈತರಿಗೆ ಕೊರೊನಾ ಸೋಂಕು ಹರಡದಂತೆ ತಪ್ಪಿಸಲು ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಪೂರೈಕೆ ಮಾಡಲಾಗುತ್ತಿದೆ.

ಕೊರೊನಾ ಭೀತಿ -ತಾತ್ಕಾಲಿಕ ಕೇಂದ್ರ ತೆರೆಯಲು ಸೂಚನೆ

ಹುಬ್ಬಳ್ಳಿ-ಧಾರವಾಡ, ಹಾವೇರಿ, ಬೀದರ್, ದಾವಣಗೆರೆ ಬೆಳಗಾವಿ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರು ಪಹಣಿ ಹಿಡಿದುಕೊಂಡು ಹೆಚ್ಚು ಜನ ಬೀಜ, ರಸಗೊಬ್ಬರಕ್ಕಾಗಿ ಸೇರುತ್ತಿರುವುದರಿಂದ ನೂಕುನುಗ್ಗಲು ಉಂಟಾಗುತ್ತಿದೆ. ಸಾಮಾಜಿಕ ಅಂತರವಿಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡರೆ ಸೋಂಕು ಹರಡುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲಾ ರೈತರಿಗೂ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಲು ಹೆಚ್ಚುವರಿ ತಾತ್ಕಾಲಿಕ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ.

ರಾಜ್ಯದಲ್ಲಿ 742 ರೈತ ಸಂಪರ್ಕ ಕೇಂದ್ರಗಳ ಮೂಲಕ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ. ಮೇ ಮಧ್ಯ ಭಾಗದಿಂದ ಆರಂಭವಾಗಿ ಜೂನ್ ಮತ್ತು ಜುಲೈ 15 ದಿನಗಳು ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಇರುತ್ತದೆ.

ರೈತರ ಬೇಡಿಕೆಗೆ ತಕ್ಕಂತೆ ಬೀಜ, ರಸಗೊಬ್ಬರ ಪೂರೈಕೆ

ಹೋಬಳಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು, ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ತಾತ್ಕಾಲಿಕ ಕೇಂದ್ರಗಳನ್ನು ತೆರೆದು ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ. ರೈತರ ಬೇಡಿಕೆಗೆ ತಕ್ಕಂತೆ ಬೀಜ, ರಸಗೊಬ್ಬರ ಪೂರೈಸಲಾಗುತ್ತಿದೆ‌. ಖಾಲಿಯಾದಂತೆ ಉಗ್ರಾಣಗಳಿಂದ ಸರಬರಾಜು ಮಾಡಲಾಗುತ್ತದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ

ರಾಜ್ಯದಲ್ಲಿ ಬಿತ್ತನೆ ಬೀಜಕ್ಕೆ ಕೊರತೆ ಇಲ್ಲ. ಜುಲೈ ತಿಂಗಳವರೆಗೆ ಸಾಕಾಗುವಷ್ಟು ಅಗತ್ಯ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಈ ಬಾರಿ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಮುಂಗಾರು ಆರಂಭವಾಗಿದ್ದು, ಇದುವರೆಗೂ ಏಳು ಲಕ್ಷ ಹೆಕ್ಟೇರ್ ವರೆಗೆ ಬಿತ್ತನೆ ಬೀಜ ಹಾಕಲಾಗಿದೆ‌. ಪ್ರತಿ ವರ್ಷ ಐದು ಲಕ್ಷ ಹೆಕ್ಟೇರ್ ನಷ್ಟು ಬಿತ್ತನೆ ನಡೆಯುತ್ತಿತ್ತು. ಸೋಯಾ ಬೀನ್ ಬೀಜ ಸ್ವಲ್ಪ ಕೊರತೆ ಇದೆ. ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳಬೇಕಿದೆ ಎಂದು ಅವರು ಮಾಹಿತಿ ನೀಡಿದರು.

ABOUT THE AUTHOR

...view details