ಕರ್ನಾಟಕ

karnataka

By

Published : Jun 8, 2021, 6:50 PM IST

Updated : Jun 8, 2021, 9:48 PM IST

ETV Bharat / briefs

ಉದಾಸಿ ಕಳೆದುಕೊಂಡು ತಬ್ಬಲಿಯಾಗಿದ್ದೇವೆ: ರಾಜಕೀಯ ಗಣ್ಯರ ಸಂತಾಪ

ಪ್ರಾಮಾಣಿಕ ವ್ಯಕ್ತಿಯಾಗಿದ್ದ ಸಿ.ಎಂ ಉದಾಸಿ ಅವರನ್ನು ಕಳೆದುಕೊಂಡು ತಬ್ಬಲಿಯಾಗಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜಕೀಯ ಗಣ್ಯರ ಸಂತಾಪ
ರಾಜಕೀಯ ಗಣ್ಯರ ಸಂತಾಪ

ಬೆಂಗಳೂರು:ಅತ್ಯಂತ ಸರಳ, ಪ್ರಾಮಾಣಿಕ ವ್ಯಕ್ತಿಯಾಗಿದ್ದ ಸಿ.ಎಂ ಉದಾಸಿ ಅವರನ್ನು ಕಳೆದುಕೊಂಡು ತಬ್ಬಲಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಉದಾಸಿ ಆರು ಬಾರಿ ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದರು. ಬಿಜೆಪಿ, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿಯೂ ಸಚಿವರಾಗಿದ್ದರು. ಹಾಲಿ ಶಾಸಕರಾಗಿದ್ದ ಉದಾಸಿ ಹಾನಗಲ್​ನಲ್ಲಿ ಜನಪ್ರಿಯ ವ್ಯಕ್ತಿಯಾಗಿ, ರಾಜ್ಯದಲ್ಲಿ ಜನ ಒಪ್ಪುವ ಹಿರಿಯ ನಾಯಕರಾಗಿದ್ದರು ಅವರನ್ನು, ಕಳೆದುಕೊಂಡು ತಬ್ಬಲಿಯಾಗಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಭಗವಂತ ನೀಡಲಿ ಎಂದು ಕೋರುತ್ತೇನೆ ಎಂದರು.

ಈಗ ಆಸ್ಪತ್ರೆಗೆ ಹೋಗಿ ಸಿಎಂ ಉದಾಸಿ ಪಾರ್ಥೀವ ಶರೀರದ ಅಂತಿಮ‌ ದರ್ಶನ ಮಾಡಲಿದ್ದೇನೆ ಎಂದ ಯಡಿಯೂರಪ್ಪ 20-25 ದಿನದ ಹಿಂದೆ ಅವರನ್ನು ಭೇಟಿ ಮಾಡಿದ್ದೆ ಎಂದು ನೆನಪಿಸಿಕೊಂಡರು.

ಆರ್​. ಅಶೋಕ್ ಸಂತಾಪ:ಬಿಜೆಪಿ ಹಿರಿಯ ನಾಯಕ ಸಿ.ಎಂ ಉದಾಸಿ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬೆಳವಣಿಗೆಗೆ ಉದಾಸಿ ಕೊಡುಗೆ ಅಪಾರವಾಗಿದೆ. ಲೋಕೋಪಯೋಗಿ ಸಚಿವರಾಗಿ, ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಒಕ್ಷದ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಪಕ್ಷಕ್ಕೆ ನಷ್ಟವುಂಟಾಗಿದೆ. ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೂಡಿ ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಅಂತಿಮ ದರ್ಶನ ಪಡೆಯಲಿದ್ದೇವೆ, ನಾಳೆ ಉದಾಸಿ ತವರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಅಶೋಕ್ ಮಾಹಿತಿ ನೀಡಿದರು.

ಉದಾಸಿ ಕಳೆದುಕೊಂಡು ತಬ್ಬಲಿಯಾಗಿದ್ದೇವೆ: ರಾಜಕೀಯ ಗಣ್ಯರ ಸಂತಾಪ

ಬಸವರಾಜ ಹೊರಟ್ಟಿ ಕಂಬನಿ:ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ , ಸರಳ ಸಜ್ಜನಿಕೆಯ ನೇತಾರ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ನಿಧನದಿಂದ ರಾಜ್ಯ ಓರ್ವ ಧೀಮಂತ ನಾಯಕನ್ನು ಕಳೆದುಕೊಂಡಂತಾಗಿದೆ. ಕಳೆದ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ನನ್ನೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಸಿ.ಎಂ.ಉದಾಸಿ ಅವರು ರಾಮಕೃಷ್ಣ ಹೆಗಡೆಯವರ ಕಾಲದಿಂದಲೂ ಜನತಾ ಪರಿವಾರದ ನಾಯಕರಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದರು. ಅವರ ನಿಧನದಿಂದ ಜನತಾ ಪರಿವಾರದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.


1983ರಲ್ಲಿ ಮೊದಲ ಬಾರಿಗೆ ಪಕ್ಷೇತರರಾಗಿ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದ ಉದಾಸಿಯವರು 1985ರಲ್ಲಿ ಜನತಾ ಪಕ್ಷದಿಂದ ಹಾಗೂ 1994ರಲ್ಲಿ ಜನತಾ ದಳದಿಂದ ವಿಧಾನ ಸಭೆಗೆ ಆಯ್ಕೆ ಹೊಂದಿ ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಬಹುವಾಗಿ ಶ್ರಮಿಸಿದ್ದರು. ಬಳಿಕ 2004, 2008 ಮತ್ತು 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಸಾರಿಗೆ, ಲೋಕೋಪಯೋಗಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಸಚಿವರಾಗಿ ಕೆಲಸ ನಿರ್ವಹಿಸಿದ್ದಲ್ಲದೇ, ಹಲವು ಮಹತ್ತರ ಯೋಜನೆಗಳ ಸಾಕಾರಕ್ಕಾಗಿ ಶ್ರಮಿಸಿದ್ದರು. ಸಿ.ಎಂ.ಉದಾಸಿಯವರ ನಿಧನದಿಂದ ಕನ್ನಡ ನಾಡಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ, ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ಬಸವರಾಜ ಹೊರಟ್ಟಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Last Updated : Jun 8, 2021, 9:48 PM IST

ABOUT THE AUTHOR

...view details