ಬೆಂಗಳೂರು:ಮಾಜಿ ಸಚಿವ ಕೆ.ಬಿ.ಶಾಣಪ್ಪ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
'ಜನಪರ ಹೋರಾಟಗಾರ, ಮಾಜಿ ಸಂಸದರು, ಮಾಜಿ ಸಚಿವರಾಗಿದ್ದ ಕೆ.ಬಿ.ಶಾಣಪ್ಪ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರು ಹಿರಿಯ ನಾಯಕರು, ಹೈದರಾಬಾದ್ ಕರ್ನಾಟಕ ಭಾಗದ ಜನರ ಧ್ವನಿಯಾಗಿ ಕೆಲಸ ಮಾಡಿದವರು. ಆ ಭಾಗದ ನಾನಾ ಅಭಿವೃದ್ಧಿ ಕಾರ್ಯಗಳ ಹಿಂದೆ ಶಾಣಪ್ಪನವರ ಹೋರಾಟದ ಪರಿಶ್ರಮವಿದೆ. ಕಾರ್ಮಿಕರು ಹಾಗೂ ಶೋಷಿತ ವರ್ಗದ ಹಿತಕ್ಕಾಗಿ ಅವಿರತ ಶ್ರಮಿಸಿದ ನಾಯಕರು ಎಂದು ಶಿವಕುಮಾರ್ ಸ್ಮರಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿ ಬಳಗಕ್ಕೆ ಆ ಭಗವಂತ ನೀಡಲಿ' ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇತರೆ ನಾಯಕರ ಸಂತಾಪ
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ, ರಾಜ್ಯಸಭೆ, ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕ ಕೆ.ಬಿ.ಶಾಣಪ್ಪ ಅವರ ನಿಧನ ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್ನಲ್ಲಿ, ಕಲ್ಯಾಣ ಕರ್ನಾಟಕದ ಪ್ರಭಾವಿ ದಲಿತ ನಾಯಕ ಹಾಗೂ ಮಾಜಿ ಸಚಿವ ಕೆ.ಬಿ.ಶಾಣಪ್ಪನವರ ನಿಧನ ಸುದ್ದಿ ತಿಳಿದು ಅತೀವ ಬೇಸರ ತಂದಿದೆ. ಅವರ ನಿಧನದಿಂದ ರಾಜ್ಯ ಒಬ್ಬ ನೇರ ನುಡಿಯ ನಾಯಕನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇವರಲ್ಲದೆ ಇನ್ನಿತರ ಹಲವು ಕಾಂಗ್ರೆಸ್ ನಾಯಕರು ಸಹ ಶಾಣಪ್ಪ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.