ನವದೆಹಲಿ: ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಮೊದಲ 6 ತಿಂಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಒಟ್ಟು 95,700 ಕೋಟಿ ರೂ. ವಂಚನೆಯಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಪ್ರಕಾರ ಸಾರ್ವಜನಿಕ ವಲಯದ ಬ್ಯಾಂಕ್ (ಪಿಎಸ್ಬಿ) ವರದಿ ಮಾಡಿದಂತೆ, 2019ರ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ 5,743 ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಂದ ಒಟ್ಟು 95,760.49 ಕೋಟಿ ರೂ. ವಂಚನೆ ನಡೆದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಹೇಳಿದರು.
ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಅವರು, 3.38 ಲಕ್ಷ ನಿಷ್ಕ್ರಿಯ ಕಂಪನಿಗಳ ಬ್ಯಾಂಕ್ ಖಾತೆಗಳನ್ನು ಗುರುತಿಸಲಾಗಿದೆ. ಬ್ಯಾಂಕ್ಗಳಲ್ಲಿನ ವಂಚನೆ ಪ್ರಕರಣಗಳನ್ನು ತಡೆಯಲು ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು, ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ನ (ಪಿಎಂಸಿ) ಗ್ರಾಹಕರಿಗೆ ನಗದು ವಾಪಸಾತಿ ಮಿತಿಯನ್ನು 50,000 ರೂ.ಗೆ ಹೆಚ್ಚಿಸಲಾಗಿದೆ. ಇದರಿಂದ ಬ್ಯಾಂಕ್ನ ಶೇ. 78ರಷ್ಟು ಠೇವಣಿದಾರರು ತಮ್ಮ ಹಣ ತೆಗೆದುಕೊಳ್ಳಲು ನೆರವಾಗಲಿದೆ ಎಂದರು.