ಕರ್ನಾಟಕ

karnataka

By

Published : Apr 11, 2021, 1:02 AM IST

ETV Bharat / business

ರಸಗೊಬ್ಬರ ಕಂಪನಿಗಳಲ್ಲಿ ಇರುವ ಗೊಬ್ಬರ ಹಳೆ ಬೆಲೆಗೆ ಮಾರಾಟ: ಸದಾನಂದಗೌಡ

ಸಾರ್ವಜನಿಕ ವಲಯದ ರಸಗೊಬ್ಬರ ಕಂಪನಿಗಳ ಹೊರತಾಗಿ ಸಹಕಾರಿ ವಲಯದ ಇಫ್ಕೋ ಕಂಪನಿಯು ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿವೆ. ಈಗಾಗಲೇ ತನ್ನ ನಿರ್ಧಾರವನ್ನು ಕಾರ್ಯಗತಗೊಳಿಸಿದೆ ಎಂದು ಡಿವಿ ಸದಾನಂದ ಗೌಡ ತಿಳಿಸಿದ್ದಾರೆ.

ಸದಾನಂದಗೌಡ
ಸದಾನಂದಗೌಡ

ಬೆಂಗಳೂರು:ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ದೆಹಲಿಯಲ್ಲಿ ರಸಗೊಬ್ಬರ ಕಾರ್ಖಾನೆಗಳ ಪ್ರತಿನಿಧಿ ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಯೂರಿಯಾ ಹೊರತಾದ ವಿವಿಧ ನಮೂನೆಯ ಪೋಷಕಾಂಶ ರಸಗೊಬ್ಬರ ಬೆಲೆಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಕರೆದಿರುವ ಈ ಸಭೆಗೆ ಮಹತ್ವ ಬಂದಿದೆ. ಭಾರತ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ಬಹುತೇಕವಾಗಿ ಆಮದು ಮಾಡಿಕೊಳ್ಳುತ್ತದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಉತ್ಪಾದನಾ ವೆಚ್ಚವೂ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್ಲ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಿಸಿವೆ. ಆದಾಗ್ಯೂ, ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿಗಳು ಹಾಗೂ ಆಮದುದಾರರ ಮನ ಒಲಿಸಲು ಕೇಂದ್ರ ಸರ್ಕಾರ ತೀವ್ರ ಪ್ರಯತ್ನ ನಡೆಸಿದೆ.

ಸಾರ್ವಜನಿಕ ವಲಯದ ರಸಗೊಬ್ಬರ ಕಂಪನಿಗಳ ಹೊರತಾಗಿ ಸಹಕಾರಿ ವಲಯದ ಇಫ್ಕೋ ಕಂಪನಿಯು ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿವೆ. ಈಗಾಗಲೇ ತನ್ನ ನಿರ್ಧಾರವನ್ನು ಕಾರ್ಯಗತಗೊಳಿಸಿದೆ ಎಂದು ಡಿವಿ ಸದಾನಂದ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಹಳೆ ದಸ್ತಾನು ಸುಮಾರು ಒಂದುವರೆ ತಿಂಗಳಿಗೆ ಸಾಕಾಗುವಷ್ಟಿದೆ. ಇಫ್ಕೋ ಬಳಿ 11.26 ಲಕ್ಷ ಟನ್ ಎನ್​ಪಿಕೆ, ಡಿಎಪಿ ಮತ್ತಿತರ ನಮೂನೆಯ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಸ್ತಾನು ಇದೆ. ರಾಜ್ಯದಲ್ಲಿಯೇ1.22 ಲಕ್ಷ ಟನ್ ದಾಸ್ತಾನಿದೆ. 50 ಕೆಜಿ ಡಿಎಪಿ ಮೂಟೆಯೊಂದಕ್ಕೆ 1200 ರೂ.ಗೆ (ಹಳೆ ದರ) ಮಾರಾಟಮಾಡಲಾಗುತ್ತಿದೆ. ಅದೇ ರೀತಿ ‘ಎನ್​ಪಿಕೆ-10-26-26’ ನಮೂನೆ ರಸಗೊಬ್ಬರ ಮೂಟೆಗೆ 1,175 ರೂ.ಯಷ್ಟು, ‘ಎನ್​ಪಿಕೆ-12-32-16’ಗೆ 1,185 ರೂ.ಯಷ್ಟು, ‘ಎನ್​ಪಿ-20-20.0.13’ಗೆ 925 ರೂ.ಯಷ್ಟು ಹಾಗೂ 15:15:15 ನಮೂನೆ ರಸಗೊಬ್ಬರಕ್ಕೆ 1,025 ರೂ. ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹಳೆದಾಸ್ತಾನು ಮುಗಿಯುವ ತನಕ ಹಳೆ ದರವೇ ಇರಲಿದ್ದು ರೈತರು ಇದರ ಉಪಯೋಗ ಪಡೆಯಬೇಕಿದೆ ಎಂದಿದ್ದಾರೆ.

ದೇಶದ ವಿವಿಧ ರಾಜ್ಯಗಳ ಬೇಡಿಕೆ ಅನುಗುಣವಾಗಿ ರಸಗೊಬ್ಬರ ಸರಬರಾಜು ಆಗುವಂತೆ ಇಲಾಖೆಯು ಮೇಲುಸ್ತುವಾರಿ ವಹಿಸುತ್ತದೆ. ಆದರೂ ಇದು ಅನಿಯಂತ್ರಿತ ವಲಯದಲ್ಲಿ ಇರುವುದರಿಂದ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರದ ನೇರ ಪಾತ್ರ ಏನು ಇರುವುದಿಲ್ಲ. ಆದರೂ ರಸಗೊಬ್ಬರ ಕಂಪನಿಗಳು ಗರಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚಕ್ಕಿಂತ ಮನಬಂದಂತೆ ಏರಿಸದಂತೆ ಸರ್ಕಾರ ನಿಗಾವಹಿಸುತ್ತದೆ. ಕಂಪನಿಗಳು ಪ್ರಮಾಣಿಕೃತ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚುವರಿಯಾಗಿ ನಿಗದಿತ ಪ್ರಮಾಣದಲ್ಲಿಯಷ್ಟೇ ಲಾಭಾಂಶ ಇಟ್ಟುಕೊಳ್ಳಬಹುದಾಗಿದೆ. ಸರಳವಾಗಿ ಹೇಳಬೇಕೆಂದರೆ ಗರಿಷ್ಠ ಮಾರಾಟದ ಬೆಲೆಯು ಉತ್ಪಾದನಾ ವೆಚ್ಚವನ್ನು ಅವಲಂಬಿಸಿರುತ್ತದೆ.

ಮುಂಬರುವ ಮುಂಗಾರು ಬೆಳೆ ಹಂಗಾಮಿನಲ್ಲಿಯೂ ರಸಗೊಬ್ಬರ ಸರಬರಾಜಿನಲ್ಲಿ ಸ್ವಲ್ಪವೂ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಕೃಷಿ ಇಲಾಖೆ ಈಗಾಗಲೇ ಮುಂಗಾರು ಹಂಗಾಮಿಗೆ ಅಗತ್ಯ ರಸಗೊಬ್ಬರದ ಬೇಡಿಕೆ ಸಲ್ಲಿಸಿದೆ. ಇದಕ್ಕೆ ಅನುಗುಣವಾಗಿ ಸರಬರಾಜು ಮಾಡಲು ತಯಾರಿ ಶುರುವಾಗಿದೆ. ಸೋಮವಾರದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ABOUT THE AUTHOR

...view details