ಬೆಳಗಾವಿ:ಬೆಂಗಳೂರು ನಂತ್ರ ಅತಿಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ, ಭೌಗೋಳಿಕವಾಗಿ ರಾಜ್ಯದ ಎರಡನೇ ಅತಿದೊಡ್ಡ ಜಿಲ್ಲೆ ಎಂಬ ಕೀರ್ತಿಗೆ ಕುಂದಾನಗರಿ ಪಾತ್ರವಾಗಿದೆ. ಹೀಗಾಗಿ, ಹಿಂದೆಂದೂ ಸಿಗದಷ್ಟು ರಾಜಕೀಯ ಪ್ರಾತಿನಿಧ್ಯ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಿಕ್ಕಿದೆ.
ಒಂದಲ್ಲ, ಎರಡಲ್ಲ ಐವರಿಗೆ ಮಂತ್ರಿಗಿರಿ
ಮೈತ್ರಿ ಸರ್ಕಾರ ಪತನದ ಬಳಿಕ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದ ಆರಂಭದಲ್ಲಿ ಲಕ್ಷ್ಮಣ ಸವದಿಗೆ ಡಿಸಿಎಂ ಹಾಗೂ ಸಾರಿಗೆ ಇಲಾಖೆ ಖಾತೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹೊಣೆ ನೀಡಲಾಗಿತ್ತು.
ಬಳಿಕ ರಾಜ್ಯದಲ್ಲಿ 15 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಗೆಲುವು ದಾಖಲಿಸಿದ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಹಾಗೂ ಬೆಳಗಾವಿ ಉಸ್ತುವಾರಿ ಮತ್ತು ಕಾಗವಾಡ ಶಾಸಕ ಶ್ರೀಮಂತ ಪಾಟೀಲಗೆ ಜವಳಿ ಖಾತೆ ನೀಡಲಾಗಿತ್ತು.
ಇದನ್ನೂ ಓದಿ: ಅಗತ್ಯ ಬಿದ್ದರೆ 17 ಮಂದಿ ಶಾಸಕರು ಮತ್ತೊಮ್ಮೆ ಸಭೆ ಸೇರಲಿದ್ದೇವೆ: ಸಚಿವ ಆರ್. ಶಂಕರ್
ಹೀಗಿದ್ದರೂ, ನಿನ್ನೆ ನಡೆದ ಸಂಪುಟ ವಿಸ್ತರಣೆಯಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡಲಾಗಿದೆ. (ಇನ್ನೂ ಖಾತೆ ಹಂಚಿಕೆ ಆಗಿಲ್ಲ) ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಉಮೇಶ್ ಕತ್ತಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದರು. ಎರಡು ಸಲ ನಡೆದ ಸಂಪುಟ ವಿಸ್ತರಣೆ ವೇಳೆ ನಿರಾಶೆಗೆ ಒಳಗಾಗಿದ್ದ ಕತ್ತಿ ಮತ್ತೊಮ್ಮೆ ಮಂತ್ರಿಗಿರಿ ಪಡೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಚಿವ ಸ್ಥಾನ ಪಡೆದವರ ಸಂಖ್ಯೆ ಐದಕ್ಕೇರಿದೆ.