ಚಿಕ್ಕೋಡಿ: ಮುಂಬೈನಲ್ಲಿ ಇತ್ತೀಚೆಗಷ್ಟೇ ಮುಕ್ತಾಯವಾದ ಮೊದಲ ವಿಶ್ವ ಮಲ್ಲಕಂಬ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತದ ಪುರುಷರ ತಂಡದಲ್ಲಿ ಕರ್ನಾಟಕದ ಏಕೈಕ ಕ್ರೀಡಾಪಟು ಭಾಗವಹಿಸಿದ್ದರು.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ವೀರಭದ್ರ ಮುಧೋಳ ಎಂಬ ಉತ್ತರ ಕರ್ನಾಟಕದ ಪ್ರತಿಭೆ, ಈ ಸ್ಪರ್ಧೆಯಲ್ಲಿ ಭಾಗವಹಿಸುವುದರ ಮೂಲಕ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಶ್ವ ಮಲ್ಲಕಂಬ ಸ್ಪರ್ಧೆಯಲ್ಲಿ ಭಾರತ ತಂಡದ 6 ಸದಸ್ಯರ ಪೈಕಿ ಒಬ್ಬರಾಗಿದ್ದ ವೀರಭದ್ರ ಅವರು, ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಪ್ರಾಚೀನ ಕ್ರೀಡೆ ಮಲ್ಲಕಂಬ, ಕ್ರೀಡಾಪಟುಗಳಿಗೆ ದೈಹಿಕ ಸಾಮರ್ಥ್ಯದ ಜೊತೆಯಲ್ಲಿ ಮಾನಸಿಕ ಸ್ಥೈರ್ಯವನ್ನು ನೀಡುತ್ತದೆ. ಸದ್ಯ ಮೂಡಬಿದರೆಯ ಆಳ್ವಾಶ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವೀರಭದ್ರ, ಮಲ್ಲಕಂಬ ಜೊತೆಗೆ ತಮ್ಮ ಒಡನಾಟ ಇಟ್ಟುಕೊಂಡಿದ್ದಾರೆ.
ಚಿಕ್ಕ ವಯಸ್ಸಿನಿಂದ ಮಲ್ಲಕಂಬ ಅಭ್ಯಾಸ...
ಬೆಂಡವಾಡ ಸರ್ಕಾರಿ ಶಾಲೆಯಲ್ಲಿ 1ರಿಂದ 5ನೇ ತರಗತಿ ಓದುವಾಗಲೇ ವೀರಭದ್ರ ಯೋಗಾಭ್ಯಾಸದತ್ತ ಹೆಚ್ಚಿನ ಗಮನ ಹರಿಸಿದ್ದರು. 6ನೇ ತರಗತಿಗೆ ಜಿಲ್ಲೆಯ ಮೂಡಲಗಿ ತಾಲೂಕಿನ ಚೈತನ್ಯ ಶಾಲೆಗೆ ಸೇರಿದ ವೀರಭದ್ರ, ಓದುವಾಗಲೇ ರಾಷ್ಟ್ರೀಯ ಮಲ್ಲಕಂಬ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಬಳಿಕ ಹೈಸ್ಕೂಲ್ ವ್ಯಾಸಾಂಗವನ್ನು ಮೈಸೂರಿನ ಜೆಎಸ್ಎಸ್ ಶಾಲೆಯಲ್ಲಿ ಮುಗಿಸಿ, ಪಿಯುಸಿಗೆ ಮೂಡಬಿದರೆಯ ಆಳ್ವಾಸ್ ಕಾಲೇಜಿಗೆ ಸೇರಿದರು.