ವಿಜಯನಗರ:ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತುಂಗಾಭದ್ರಾ ಜಲಾಶಯ ಅವಧಿಗೆ ಮುನ್ನವೇ ಈ ವರ್ಷ ಭರ್ತಿಯಾಗಿದೆ. ಜಲಾಶಯದಲ್ಲಿ ಹಗಲಿನ ವೇಳೆ ಹಾಲಿನ ನೊರೆಯಂತೆ ಧುಮ್ಮಿಕ್ಕುವ ಜಲಧಾರೆ ಒಂದು ಕಡೆಯಾದರೆ ಇನ್ನೊಂದೆಡೆ ಸಂಜೆ ವೇಳೆ ಜಲಾಶಯಕ್ಕೆ ಅಳವಡಿಸಿದ ಬಣ್ಣ ಬಣ್ಣದ ವಿದ್ಯುತ್ ಅಲಂಕಾರ ನಿಜವಾಗಿಯೂ ನೋಡುಗರ ಕಣ್ಮನ ಸೆಳೆಯುವುದರ ಜೊತೆಗೆ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಈ ತುಂಗಾಭದ್ರಾ ಜಲಾಶಯ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆ ಸೇರಿದಂತೆ ನೆರೆಯ ಆಂಧ್ರಪ್ರದೇಶದ ಕೆಲ ಜಿಲ್ಲೆಗಳಿಗೂ ಜೀವನಾಡಿ. ಮಲೆನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಲಾಶಯದ ಒಳ ಹರಿವು ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 1633 ಅಡಿ ಇದ್ದು, ಇದೀಗ 1632 ಅಡಿಗಷ್ಟು ನೀರು ತುಂಬಿದೆ.
ಈ ಪರಿಣಾಮ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿ ಹಾಗೂ ಕಾಲುವೆಗಳಿಗೆ ಬಿಡಲಾಗುತ್ತಿದೆ. ಜಲಾಶಯದ 30 ಗೇಟ್ಗಳ ಮೂಲಕ ನೀರು ಹೊರಬಿಡಲಾಗುತ್ತಿದೆ. ಈ ವೇಳೆ ಧುಮ್ಮಿಕ್ಕುವ ನೀರಿನ ಮನಮೋಹಕ ದೃಶ್ಯ ನೋಡಲು ಎರಡು ಕಣ್ಣು ಸಾಲುವುದಿಲ್ಲ. ರಾತ್ರಿಯಾಗುತ್ತಿದ್ದಂತೆ ಜಲಾಶಯ ಬಣ್ಣ ಬಣ್ಣದ ವಿದ್ಯುತ್ ಅಲಂಕಾರದಿಂದ ಕಂಗೊಳಿಸುವುದನ್ನು ನೋಡಲು ಸಹ ಜನರು ಮುಗಿಬೀಳುತ್ತಾರೆ.