ಕರ್ನಾಟಕ

karnataka

By

Published : Dec 19, 2021, 2:12 AM IST

ETV Bharat / city

ಕೆಐಎ​​ನಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ: ಕಾಮಗಾರಿ ವೀಕ್ಷಿಸಿದ ಸಚಿವ ಅಶ್ವತ್ಥನಾರಾಯಣ

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗುತ್ತಿದ್ದು, ಸಚಿವ ಅಶ್ವತ್ಥನಾರಾಯಣ ಭೇಟಿ ನೀಡಿದರು.

statue of Kempegowda
statue of Kempegowda

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣದ ಕಾಮಗಾರಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವೀಕ್ಷಿಸಿದರು.

ಕೆಂಪೇಗೌಡ ಪ್ರತಿಮೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಸಚಿವ ಅಶ್ವತ್ಥನಾರಾಯಣ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃವಾಗಿದ್ದು, ಅವರಿಗೆ ಸಂಬಂಧಿಸಿದ ಪರಂಪರೆಯನ್ನು ಸಂರಕ್ಷಿಸಲು ಸರಕಾರ ತೀರ್ಮಾನಿಸಿದೆ. ಇದರಂತೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ 23 ಎಕರೆ ವಿಸ್ತಾರದ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರುತ್ತಿದೆ ಎಂದರು. ಕೆಂಪೇಗೌಡರ ಪ್ರತಿಮೆ ಮತ್ತು ಪಾರಂಪರಿಕ ಉದ್ಯಾನ ನಿರ್ಮಾಣಕ್ಕೆ 2020ರಲ್ಲೇ ಅಡಿಗಲ್ಲು ಹಾಕಲಾಗಿದೆ. ಕೊರೊನಾ ಸಾಂಕ್ರಾಮಿಕದ ಕಾರಣಕ್ಕಾಗಿ ಪ್ರತಿಮೆ ನಿರ್ಮಾಣ ತಡವಾಗಿದೆ ಎಂದರು.

ಕಾಮಗಾರಿ ವೀಕ್ಷಿಸಿದ ಸಚಿವ ಅಶ್ವತ್ಥನಾರಾಯಣ

ಗುಜರಾತಿನ ಏಕತಾ ಪ್ರತಿಮೆ ಮತ್ತು ಬೆಂಗಳೂರಿನಲ್ಲಿ ಮಹಾತ್ಮ ಗಾಂಧಿಯ ಪ್ರತಿಮೆಯನ್ನು ನಿರ್ಮಿಸಿರುವ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ದೆಹಲಿ ಸಮೀಪದ ನೋಯ್ಡಾದಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ. ಇದಕ್ಕಾಗಿ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಕೆಂಪೇಗೌಡರ ಕಾಲುಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಸೊಂಟದ ಭಾಗ ಇನ್ನಷ್ಟೇ ಅಳವಡಿಸಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿರಿ:ರಾಹುಲ್​​ ದ್ರಾವಿಡ್​ ಬಯೋಪಿಕ್​​ನಲ್ಲಿ ಸುದೀಪ್​ ನಟನೆ? ಹಕ್ಕು ತಂದ್ರೆ ಸಿನಿಮಾ ಮಾಡ್ತೀನಿ ಎಂದ ಕಬೀರ್ ಖಾನ್!

ಕೆಂಪೇಗೌಡರ ಸಮಾಧಿ ಸ್ಥಳವು ಮಾಗಡಿ ತಾಲೂಕಿನಲ್ಲಿದ್ದು, ಅದನ್ನು ಕೂಡ ಸಂರಕ್ಷಿಸಲಾಗುತ್ತಿದೆ. ಕೆಂಪೇಗೌಡರಿಂದಾಗಿ ಬೆಂಗಳೂರಿಗೆ ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಬಂದಿದೆ ಎಂದರು.ಈ ಸಂದರ್ಭದಲ್ಲಿ ಕಾಮಗಾರಿ ನಡೆಸುತ್ತಿರುವ ಸಿಬ್ಬಂದಿ ವರ್ಗದಿಂದ ಅಗತ್ಯ ಮಾಹಿತಿ ಪಡೆದುಕೊಂಡು, ಕೆಲಸವನ್ನು ಮತ್ತಷ್ಟು ತ್ವರಿತಗೊಳಿಸುವಂತೆ ಸೂಚಿಸಿದರು.

ABOUT THE AUTHOR

...view details