ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ 1971ರಲ್ಲಿ “ಜನಸೇವಾ ಟ್ರಸ್ಟ್” ಹೆಸರಿನಲ್ಲಿ ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಲಾಯಿತು. ಈಗ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಡೀ ವರ್ಷ ಪೂರ್ಣ ಮಂಡಲೋತ್ಸವ (ಸ್ವರ್ಣ ಜಯಂತಿ ವರ್ಷ) ಆಚರಿಸಲು ನಿರ್ಧರಿಸಲಾಗಿದೆ ಎಂದು ಆರ್ಎಸ್ಎಸ್ನ ಕ್ಷೇತ್ರೀಯ ಕಾರ್ಯವಾಹಕ, ಜನಸೇವಾ ವಿಶ್ವಸ್ತಮಂಡಳಿ ನಿರ್ವಾಹಕ ಎನ್. ತಿಪ್ಪೇಸ್ವಾಮಿ ತಿಳಿಸಿದರು.
ರಾಜ್ಯಪಾಲರಿಂದ ಮಂಡಲೋತ್ಸವ ಕಾರ್ಯಕ್ರಮ ಉದ್ಘಾಟನೆ :ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸ್ವರ್ಣ ಜಯಂತಿ ನಿಮಿತ್ತ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 26ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪೂರ್ಣ ಮಂಡಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಾಮಕೃಷ್ಷಾಶ್ರಮದ ಅಧ್ಯಕ್ಷ ಮುಕ್ತಿದಾನಂದಜಿ, ಸಂಸ್ಕೃತ ಮಹಾವಿದ್ಯಾಲಯದ ಕುಲಪತಿ ದೇವನಾಥನ್, ಗೋಕುಲ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಎಂ.ಆರ್. ಜಯರಾಮ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು.
ವಿವಿಧ ಪ್ರಕಾರದ ಚಟುವಟಿಕೆಗಳ ಪ್ರಾರಭಕ್ಕೆ ನಿರ್ಧಾರ :ಸ್ವರ್ಣ ಜಯಂತಿ ಕಾರ್ಯಕ್ರಮದಡಿ ಶೈಕ್ಷಣಿಕ ಉನ್ನತೀಕರಣ, ಕನ್ನಡ ಮಾಧ್ಯಮದ ಅಧಿಶೀಲ ಶಿಕ್ಷಣ, ಗೋಶಾಲೆ, ಪ್ರಕೃತಿ ಚಿಕಿತ್ಸಾ ಕೇಂದ್ರ, ವರ್ಷಪೂರ್ತಿ ಬೇರೆ ಬೇರೆ ತಿಂಗಳುಗಳಲ್ಲಿ ಗುರುಕುಲದ ರಾಷ್ಟ್ರೀಯ ಸಮ್ಮೇಳನ, ಹಿರಿಯ ವಿದ್ಯಾರ್ಥಿ ಸಮಾವೇಶ, ತರುಣ ಶಕ್ತಿಯ ಸಮಾವೇಶ ಮತ್ತು ಸುತ್ತಲಿನ 50 ಗ್ರಾಮಗಳಲ್ಲಿ ವಿವಿಧ ಪ್ರಕಾರದ ಚಟುವಟಿಕೆಗಳನ್ನು ಪ್ರಾರಂಭಿಸಬೇಕೆಂದು ನಿಶ್ಚಯಿಸಲಾಗಿದೆ ಎಂದು ಹೇಳಿದರು.
600 ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿದೆ :ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಜೊತೆಗೆ ದೇಶಭಕ್ತಿ, ಸಂಸ್ಕಾರ ಹಾಗೂ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪ್ರಾರಂಭವಾದ ಜನಸೇವಾ ವಿದ್ಯಾಕೇಂದ್ರವು ಆರಂಭದಲ್ಲಿ ಬೆಂಗಳೂರಿನ ಗೋವಿಂದರಾಜನಗರದಲ್ಲಿ 13 ವಿದ್ಯಾರ್ಥಿಗಳಿಂದ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ 5 ರಿಂದ 10ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಎರಡರಲ್ಲೂ ಶಿಕ್ಷಣ ನೀಡಲಾಗುತ್ತಿದೆ.