ಕರ್ನಾಟಕ

karnataka

ETV Bharat / city

ಪರಪ್ಪನ ಅಗ್ರಹಾರ ಅವ್ಯವಹಾರ ವಿಚಾರಣೆಗೆ ಎಡಿಜಿಪಿ ಎಸ್. ಮುರುಗನ್ ನೇಮಕ - ಪರಪ್ಪನ ಅಗ್ರಹಾರ ಅವ್ಯವಹಾರ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆಪಾದನಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ಎಸ್. ಮುರುಗನ್ ಅವರನ್ನು ವಿಚಾರಣಾ ಅಧಿಕಾರಿಯಾಗಿ ನೇಮಿಸಲಾಗಿದೆ..

ಎಸ್. ಮುರುಗನ್
ADGP S Murugan

By

Published : Jan 29, 2022, 5:39 PM IST

ಬೆಂಗಳೂರು :ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆಪಾದನಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ಸಲ್ಲಿಸಲು ಗೃಹ ಇಲಾಖೆಯು ಸರ್ಕಾರದ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ಎಡಿಜಿಪಿ ಎಸ್. ಮುರುಗನ್ ಅವರನ್ನು ವಿಚಾರಣಾ ಅಧಿಕಾರಿಯಾಗಿ ನೇಮಿಸಿ ಇಂದು ಆದೇಶ ಹೊರಡಿಸಿದೆ.

ಜ.25ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದ ಆಡಳಿತದ ವಿರುದ್ಧ ಸುದ್ದಿ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿ/ಸಿಬ್ಬಂದಿಯನ್ನು ಗುರುತಿಸಿ ಕೂಲಂಕಷವಾಗಿ ವಿಚಾರಣೆ ನಡೆಸಿ ತುರ್ತಾಗಿ ವರದಿ ಸಲ್ಲಿಸಲು ಉತ್ತರ ವಲಯದ ಕಾರಾಗ್ರಹಗಳ ಉಪಮಹಾನಿರೀಕ್ಷಕರಿಗೆ ಸೂಚಿಸಲಾಗಿತ್ತು.

ಜ. 27ರಂದು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸರ್ಕಾರದ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಪೊಲೀಸ್ ಮಹಾ ನಿರ್ದೇಶಕರೊಂದಿಗೆ ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ವಿಷಯದ ಬಗ್ಗೆ ನಡೆದ ಸಭೆಯಲ್ಲಿ ಚರ್ಚೆ ನಡೆದಿತ್ತು.

ಇದನ್ನೂ ಓದಿ: ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಆಹಾರ ಪದಾರ್ಥ ಮಾರಾಟ ವಿಡಿಯೋ ವೈರಲ್

ಪ್ರಸ್ತುತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿ/ಸಿಬ್ಬಂದಿಯ ವಿರುದ್ಧ ಹಿರಿಯ ಅಧಿಕಾರಿಗಳಿಂದ ಉನ್ನತ ಮಟ್ಟದ ವಿಚಾರಣೆಯನ್ನು ನಡೆಸಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಪೊಲೀಸ್ ಮಹಾನಿರೀಕ್ಷಕರ (ಕಾರಾಗ್ರಹ) ಹುದ್ದೆಯು ಖಾಲಿಯಿದೆ. ಪ್ರಸ್ತಾಪಿತ ಪ್ರಕರಣದಲ್ಲಿ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋ ಯಾವ ರೀತಿ ಕಾರಾಗೃಹದಲ್ಲಿ ಚಿತ್ರೀಕರಣವಾಯಿತು ಹಾಗೂ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಗುರುತಿಸಿ, ಪ್ರಕರಣದ ಸತ್ಯಾಸತ್ಯತೆಯ ಬಗ್ಗೆ ತುರ್ತಾಗಿ ಸಮಗ್ರವಾಗಿ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಎಡಿಜಿಪಿ ಎಸ್ ಮುರುಗನ್ ಅವರನ್ನು ನಿಯೋಜಿಸಲು ತೀರ್ಮಾನಿಸಲಾಗಿತ್ತು.

ಇವರಿಗೆ ಸಹಾಯಕರಾಗಿ ಬೆಳಗಾವಿ ಉತ್ತರ ವಲಯದ ಕಾರಾಗೃಹಗಳ ಉಪ ಮಹಾನಿರೀಕ್ಷಕ ಎಂ. ಸೋಮಶೇಖರ್ ಅವರನ್ನು ನೇಮಿಸಲು ತೀರ್ಮಾನಿಸಲಾಗಿದೆ. ಈ ವಿಚಾರಣಾಧಿಕಾರಿಗಳು ಅಂತಿಮ ವರದಿಯನ್ನು ಹಾಗೂ ವಿಚಾರಣೆಯ ಪ್ರಗತಿಯ ಪ್ರತಿಯೊಂದು ಹಂತದ ಬಗ್ಗೆ ಮಾಹಿತಿಯನ್ನು ಕಾಲ ಕಾಲಕ್ಕೆ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಪೊಲೀಸ್ ಮಹಾನಿರ್ದೇಶಕರಿಗೆ ನೇರವಾಗಿ ಕಳುಹಿಸಲು ಸಹ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಸದರಿ ಸಭೆಯ ನಿರ್ಣಯದಂತೆ ರಾಜ್ಯ ಸರ್ಕಾರ ಇಂದು ಮುರುಗನ್ ಅವರನ್ನು ವಿಚಾರಣಾ ಅಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details