ಬೆಂಗಳೂರು :ಅಂತಾರಾಜ್ಯ ಜಲ ವ್ಯಾಜ್ಯಗಳಲ್ಲಿ ರಾಜ್ಯ ಸರ್ಕಾರ ಯಾವ ರೀತಿ ಮುಂದುವರೆಯಬೇಕು ಎನ್ನುವ ಕುರಿತು ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಸಿಎಂ ನಡೆಸುತ್ತಿರುವ ಸಭೆಯಲ್ಲಿ ಸುಪ್ರೀಂಕೋರ್ಟ್ನಲ್ಲಿ ರಾಜ್ಯದ ಪರ ಹಿರಿಯ ವಕೀಲರಾದ ಮೋಹನ್ ಕಾತರಕಿ, ಶ್ಯಾಂ ದಿವಾನ್ ಸೇರಿ ಹಲವರು, ಸಂಬಂಧಿಸಿದ ಇಲಾಖೆಗಳ ಸಚಿವರು, ಎಜಿ ಪ್ರಭುಲಿಂಗ ನಾವಡಗಿ, ಸಿಎಸ್ಪಿ ರವಿಕುಮಾರ್ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಜಲಸಂಪನ್ಮೂಲ ಇಲಾಖೆ, ಕಾವೇರಿ ಮತ್ತು ಕರ್ನಾಟಕ ನೀರಾವರಿ ನಿಗಮಗಳು ಹಾಗೂ ಕೃಷ್ಣ ಜಲಭಾಗ್ಯ ನಿಗಮಗಳ ಅಧಿಕಾರಿಗಳು ಭಾಗಿಯಾಗಿದ್ದರು.
ಫೆಬ್ರವರಿ ಮೊದಲ ವಾರ ಸರ್ವಪಕ್ಷ ಸಭೆ :ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೃಷ್ಣಾ, ಕಾವೇರಿ ಜಲಾನಯನ ಪ್ರದೇಶಗಳ ಜಲ ವ್ಯಾಜ್ಯ, ಕೋರ್ಟ್ನಲ್ಲಿರುವ ಯೋಜನೆಗಳ ಕುರಿತು ಸುದೀರ್ಘ ಚರ್ಚೆಯಾಗಿದೆ. ನ್ಯಾಯವಾದಿಗಳು ಕೂಡ ಸಮಗ್ರ ಮಾಹಿತಿ ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ಜನವರಿ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಸಂವಾದ ಮಾಡಲಿದ್ದೇವೆ. ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ಕತೆಯುತ್ತೇನೆ ಎಂದರು.
ನ್ಯಾಯವಾದಿಗಳು, ಹಿರಿಯ ಸಚಿವರು, ಉಭಯ ಸದನಗಳ ನಾಯಕರನ್ನು ಕರೆದು ಕಾನೂನು ಹೋರಾಟ ಎಲ್ಲಿಯವರಗೆ ನಡೆದಿದೆ. ಕೋರ್ಟ್ ಕೇಸ್ ಎಲ್ಲಿಗೆ ಬಂದಿದೆ. ರಾಜ್ಯ ಯಾವ ರೀತಿಯಲ್ಲಿ ಮುಂದುವರೆಯಬೇಕು ಎಂದು ಚರ್ಚೆ ನಡೆಸಲಾಗುತ್ತದೆ. ನಾವೆಲ್ಲಾ ನೆಲ, ಜಲ ವಿಚಾರದಲ್ಲಿ ಒಂದಾಗಿ ಹೋಗಿದ್ದೇವೆ. ನಾವು ವಿಪಕ್ಷದಲ್ಲಿದ್ದಾಗ ಸಹಕಾರ ಕೊಟ್ಟಿದ್ದೇವೆ. ಈಗ ಅವರ ಸಹಕಾರ ಕೋರುತ್ತಿದ್ದೇವೆ. ಅದಕ್ಕಾಗಿ ಈಗ ಮತ್ತೆ ಸರ್ವಪಕ್ಷ ಸಭೆ ಕರೆದು ಅವರ ಜೊತೆ ಚರ್ಚೆ ನಡೆಸಲಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದರು.