ಕರ್ನಾಟಕ

karnataka

By

Published : Jul 23, 2022, 7:13 AM IST

ETV Bharat / city

ಮತಾಂತರ ನಿಷೇಧ ಸುಗ್ರೀವಾಜ್ಞೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನೋಟಿಸ್

ಮತಾಂತರ ನಿಷೇಧ ಸುಗ್ರೀವಾಜ್ಞೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್- ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ- ಆಕ್ಷೇಪಣೆ ಸಲ್ಲಿಕೆಗೆ ಆದೇಶ

High Court
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಬಲವಂತದ ಮತಾಂತರದ ಚಟುವಟಿಕೆಗಳನ್ನು ತಡೆಗಟ್ಟುವ ಕುರಿತಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯ (ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ಕಾಯ್ದೆ) ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಈ ಸಂಬಂಧ ನ್ಯಾಯಾಲಯ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ಅರ್ಜಿಯಲ್ಲಿ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಲಾಗಿದ್ದು, ಮತಾಂತರ ನಿಷೇಧ ಕಾಯ್ದೆ ಅಸಹಿಷ್ಣುತೆಯನ್ನು ಪ್ರದರ್ಶಿಸುತ್ತದೆ. ಭಾರತೀಯ ಪ್ರಜಾಪ್ರಭುತ್ವವನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಜಾತ್ಯತೀತೆಯ ಮೇಲಿನ ದಾಳಿ ಎಂದು ಪ್ರಸ್ತಾಪಿಸಲಾಗಿದೆ.

ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ದೆಹಲಿ ಮೂಲದ ಇವಾನೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಜೆ.ಎಂ ಖಾಜಿ ಅವರಿದ್ದ ವಿಭಾಗೀಯ ಪೀಠ, ಈ ಸಂಬಂಧ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಆದೇಶ ನೀಡಿದೆ.

ಮತಾಂತರ ನಿಷೇಧ ಸುಗ್ರೀವಾಜ್ಞೆಯ ನಿಬಂಧನೆಗಳು ವ್ಯಕ್ತಿಯ ಆಯ್ಕೆಯ ಸ್ವಾತಂತ್ರ್ಯ, ಜೀವನ, ಸ್ವಾತಂತ್ರ್ಯದ ಹಕ್ಕು ಹಾಗು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಪ್ರತಿಬಂಧಿಸುತ್ತದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯಕ್ಕೆ ಅಧಿಕಾರ ನೀಡುವುದರಿಂದ ಸುಗ್ರೀವಾಜ್ಞೆಯ ನಿಬಂಧನೆಗಳು ಸಂವಿಧಾನದ 21ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಪಿಐಎಲ್​​ನಲ್ಲಿ ಪ್ರತಿಪಾದಿಸಿದ್ದಾರೆ.

ರಾಜ್ಯ ಸರ್ಕಾರ ಕಳೆದ ಮೇ ತಿಂಗಳ 17ರಿಂದ ಜಾರಿಗೆ ಬರುವಂತೆ ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ(ಮತಾಂತರ ನಿಷೇಧ)ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವಾರು ಸಂಘ - ಸಂಸ್ಥೆಗಳಿಂದ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ಮತಾಂತರ ನಿಷೇಧದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ: ರಾಜ್ಯದಲ್ಲಿ ಅಧಿಕೃತವಾಗಿ ಕಾಯ್ದೆ ಜಾರಿ

ABOUT THE AUTHOR

...view details