ಬೆಂಗಳೂರು:ಇನ್ನು ಮೂರು ದಿನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ದುಬೈ ಪ್ರವಾಸಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧವಾಗಿರುತ್ತೇವೆ ಎಂದಿದ್ದಾರೆ.
ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮವಾಗಿರಲಿದೆ. ಆದರೆ ಇನ್ನು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಹಳ ಜನ ಪಕ್ಷಕ್ಕೆ ಇನ್ನೂ ಬರುವವರಿದ್ದಾರೆ. ನಮ್ಮ ಪಕ್ಷ ಇನ್ನಷ್ಟು ಬಲವಾಗಲಿದೆ. ನಮ್ಮ ಗುರಿ 150 ಸ್ಥಾನ ಗೆಲ್ಲೋದಾಗಿದೆ. ಪ್ರಧಾನಿಯವರಿಗೆ 150 ಕ್ಷೇತ್ರ ಗೆಲ್ಲುವ ಭರವಸೆ ಕೊಟ್ಟಿದ್ದೇವೆ. ಆ ಗುರಿ ಮುಟ್ಟಲು ರಾಜ್ಯ ಪ್ರವಾಸ ಮಾಡುತ್ತೇವೆ. ಪ್ರತಿ ಜಿಲ್ಲೆಯಿಂದಲೂ ಪಕ್ಷಕ್ಕೆ ಬರುತ್ತಾರೆ, ಅದರಲ್ಲೂ ಮಂಡ್ಯದಿಂದ ಅನೇಕ ಜನ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿಸಿದರು.