ಕರ್ನಾಟಕ

karnataka

ಶೇ.50ರಷ್ಟು ಹಾಸಿಗೆ ಬಿಟ್ಟುಕೊಡುವಂತೆ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸಿಎಂ ಖಡಕ್ ಸೂಚನೆ

By

Published : Jul 18, 2020, 7:41 PM IST

ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಸಿಎಂ ಬಿ. ಎಸ್​. ಯಡಿಯೂರಪ್ಪನವರು ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ನಾಳೆಯಿಂದಲೇ ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಸಿಎಂ ಸೂಚಿದ್ದಾರೆ.

cm-instructs-private-medical-colleges-to-give-up-to-50-percent-bed
ಯಡಿಯೂರಪ್ಪ

ಬೆಂಗಳೂರು: ಸರ್ಕಾರಕ್ಕೆ ಶೇ 50 ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡುವಂತೆ ಸಿಎಂ ಬಿ.ಎಸ್​. ಯಡಿಯೂರಪ್ಪ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರು ಇಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಕೋವಿಡ್ ಹಾಗೂ ಇತರೆ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವುದು ಸರ್ಕಾರದ ಗಮನಕ್ಕೆ ಬಂದಿದೆ. ಹಾಗೆಯೇ ಕೊರೊನಾ ಚಿಕಿತ್ಸೆ ಅಗತ್ಯವಿರುವವರು ಹಾಗೂ ಇತರ ಸಮಸ್ಯೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ದೊರೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವ ಹಾಗೂ ಹಲವರು ಪ್ರಾಣಬಿಟ್ಟ ಬಗ್ಗೆ ಸಿಎಂ ಕಳವಳ ವ್ಯಕ್ತಪಡಿಸಿದರು.

ಹಾಸಿಗೆ ಬಿಟ್ಟುಕೊಡುವಂತೆ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸಿಎಂ ಖಡಕ್ ಸೂಚನೆ

ಹಿಂದಿನ ಸಭೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2 ಸಾವಿರ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 4,500 ಹಾಸಿಗೆಗಳು ದೊರೆಯುವುದು ಎಂದು ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಅಷ್ಟು ಸಂಖ್ಯೆಯ ಹಾಸಿಗೆಗಳನ್ನು ಒದಗಿಸದೆ ಇರುವ ಬಗ್ಗೆ ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಂದಿನ ಈ ತುರ್ತು ಸಂದರ್ಭದಲ್ಲಿ ಮಾನವೀಯತೆಯಿಂದ ಕೋವಿಡ್ ಚಿಕಿತ್ಸೆಗೆ ಸಹಕರಿಸಬೇಕು. ಇತರ ರೋಗಗಳಿಗೂ ಚಿಕಿತ್ಸೆ ನಿರಾಕರಿಸದೆ, ರಾಜ್ಯದ ವೈದ್ಯಕೀಯ ವ್ಯವಸ್ಥೆಯಲ್ಲಿ ಸಮತೋಲನ ಇರುವಂತೆ ಎಚ್ಚರ ವಹಿಸಬೇಕು ಎಂದು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದರು‌.

ಇದಲ್ಲದೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ.50 ರಷ್ಟು ಹಾಸಿಗೆಗಳನ್ನು ನಾಳೆಯಿಂದಲೇ ಕೋವಿಡ್ ಚಿಕಿತ್ಸೆಗೆ ಒದಗಿಸುವಂತೆ ಸಿಎಂ ಸೂಚಿದ್ದಾರೆ. ವೈದ್ಯರು, ನರ್ಸ್​ಗಳ ಕೊರತೆ ಇದ್ದರೆ, ಸರ್ಕಾರವೇ ನೇಮಕ ಮಾಡುವುದು. ಯಾವುದೇ ರೀತಿಯ ಬೆಂಬಲ ಅಗತ್ಯವಿದ್ದರೂ ಸರ್ಕಾರ ನೀಡಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ಇದಕ್ಕೆ ಸ್ಪಂದಿಸಿದ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ.50ರಷ್ಟು, ಇನ್ನು ಕೆಲ ಕಾಲೇಜುಗಳು ಶೇ. 80 ರಷ್ಟು ಹಾಸಿಗೆಗಳನ್ನು ನೀಡುವುದಾಗಿ ಹಾಗೂ ಲಭ್ಯವಿರುವ ವೆಂಟಿಲೇಟರ್​ಗಳನ್ನು ಸಹ ಒದಗಿಸುವುದಾಗಿ ಸಿಎಂಗೆ ಭರವಸೆ ನೀಡಿದ್ದಾರೆ. ಇನ್ನು‌ ಕಾಲೇಜುಗಳ ಬೆಡ್​ಗಳ ಮೇಲೆ‌ ನಿಗಾ ಇಡಲು‌ ಅಧಿಕಾರಿಗಳನ್ನು‌‌ ಈಗಾಗಲೇ ನೇಮಕ‌ ಮಾಡಲಾಗಿದೆ. ಸಭೆಗೆ ಹಾಜರಾಗದ ವೈದೇಹಿ ವೈದ್ಯಕೀಯ ಕಾಲೇಜಿಗೆ ನೋಟಿಸ್ ನೀಡಲು ಸಿಎಂ ಸೂಚನೆ ನೀಡಿದರು.

For All Latest Updates

ABOUT THE AUTHOR

...view details