ಕರ್ನಾಟಕ

karnataka

ETV Bharat / city

ಲಾಕ್​​​ಡೌನ್ ಮುಂದುವರೆಸುವ ಪ್ರಸ್ತಾಪವಿಲ್ಲ, ಆಸ್ಪತ್ರೆಗಳಲ್ಲಿನ ತೊಡಕು ನಿವಾರಿಸಿ: ಸಿಎಂ - ಲಾಕ್​ಡೌನ್​ ಅಪ್​ಡೇಟ್

ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು 8 ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ಕೋವಿಡೇತರ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿಪಡಿಸುವಂತೆ ಸಚಿವರಿಗೆ ಸೂಚಿಸಿದರು.

CM meeting with ministers
ಸಚಿವರೊಂದಿಗೆ ಮುಖ್ಯಮಂತ್ರಿ ಸಭೆ

By

Published : Jul 17, 2020, 2:35 PM IST

ಬೆಂಗಳೂರು:ಕೋವಿಡ್ ನಿಯಂತ್ರಣಕ್ಕೆ ಲಾಕ್​​​ಡೌನ್ ಪರಿಹಾರವಲ್ಲ, ಲಾಕ್​​​ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಿದರು.

ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು 8 ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಿಎಂ ಇಂದು ಸಭೆ ನಡೆಸಿ ಚರ್ಚಿಸಿದರು.

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ಕೋವಿಡೇತರ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿಪಡಿಸುವಂತೆ ಇದೇ ವೇಳೆ ಸೂಚನೆ ಕೊಟ್ಟರು.

ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸದೆ, ಕೋವಿಡ್ ಕೇರ್ ಸೆಂಟರ್​​​ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಮತ್ತು ತೀವ್ರತರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆಯೂ ತಿಳಿಸಿದರು.

ಸಚಿವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ಆಸ್ಪತ್ರೆಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸುವಂತೆ ಸೂಚಿಸಿದರು.

ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಆ್ಯಂಬ್ಯುಲೆನ್ಸ್ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪ ಹಾಗು ವಸತಿ ಗೃಹಗಳನ್ನು ಗುರುತಿಸಲಾಗಿದೆ. ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆಯೂ ಸೂಚಿಸಿದರು. ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದು, ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.

ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ, ಆ್ಯಂಬ್ಯುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ಈ ವ್ಯವಸ್ಥೆಯನ್ನು ವಿಕೇಂದ್ರೀಕರಿಸಿ, ವಲಯವಾರು ಮೇಲ್ವಿಚಾರಣೆ ನಡೆಸುವಂತೆ ಸೂಚಿಸಿದರು. ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್​​ಗೆ ದಾಖಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ABOUT THE AUTHOR

...view details