ಕರ್ನಾಟಕ

karnataka

ETV Bharat / city

ಚಿರು ಅಗಲಿಕೆಗೆ ಸಿಎಂ ಬಿಎಸ್​ವೈ, ಸಿದ್ದರಾಮಯ್ಯ, ಹೆಚ್​ಡಿಕೆ ಸೇರಿ ಗಣ್ಯರ ಸಂತಾಪ

ಕನ್ನಡದ ಯುವ ನಟ ಚಿರಂಜೀವಿ ಇಂದು ನಿಧನರಾಗಿದ್ದು, ಅವರ ಅಭಿಮಾನಿಗಳಲ್ಲಿ ದುಃಖ ತರಿಸಿದೆ. ಅವರ ಅಗಲಿಕೆಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ.

By

Published : Jun 7, 2020, 6:40 PM IST

Updated : Jun 7, 2020, 8:03 PM IST

chiranjeevi
ಚಿರು

ಬೆಂಗಳೂರು:ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು ಹಾಗೂ ಚಲನಚಿತ್ರ ದಿಗ್ಗಜರು ತೀವ್ರ ಸಂತಾಪ ಸೂಚಿಸಿದ್ದಾರೆ.

ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಅವರು, ಇನ್ನೂ ಪ್ರವರ್ಧಮಾನಕ್ಕೆ ಬರಬೇಕಿದ್ದ, ಉಜ್ವಲ ಭವಿಷ್ಯ ಹೊಂದಿದ್ದ ಕಲಾವಿದ. ಅವರ ನಿಧನದಿಂದ ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವ ಎಂ ಬಿ ಪಾಟೀಲ ಟ್ವೀಟ್

ಸರ್ಜಾ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಎಂ ಬಿ ಪಾಟೀಲ್​ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಚಿರಂಜೀವಿ ಸರ್ಜಾರ ಅಕಾಲಿಕ ಮರಣ ಆಘಾತವುಂಟು ಮಾಡಿದೆ. ಸರ್ಜಾ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮಾಜಿ ನೀರಾವರಿ ಸಚಿವ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಹೆಚ್​ಡಿಕೆ, ದೊಡ್ಡಗೌಡರ ಸಂತಾಪ

ಟ್ವೀಟ್ ಮೂಲಕ ಚಿರಂಜೀವಿ ಸರ್ಜಾ ನಿಧನದ ಬಗ್ಗೆ ಆಘಾತ ವ್ಯಕ್ತಪಡಿಸಿದ ಹೆಚ್​ಡಿಕೆ, ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಭಿಮಾನಿಗಳಿಗೆ ಹಾಗೂ ಬಂಧು ಮಿತ್ರರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕನ್ನಡ ಚಿತ್ರರಂಗದ ‌ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂತಾಪ‌ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಚಿರಂಜೀವಿ ಸರ್ಜಾ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಸಿದ್ದರಾಮಯ್ಯ ಸಂತಾಪ...

"ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು."

ಸದಾನಂದ ಗೌಡ ಬೇಸರ...

"ನಟ ಚಿರಂಜೀವಿ ಸರ್ಜಾ ಹೃದಯಾಘಾತ ಅಕಾಲಿಕ ನಿಧನದ ಸುದ್ದಿ ನಿಜಕ್ಕೂ ಆಘಾತಕಾರಿ. ಅವರ ಕುಟುಂಬ, ಲಕ್ಷಾಂತರ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುವೆ. ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ. "

ದರ್ಶನ್​ ಟ್ವೀಟ್​...

"ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಮೇಘನ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ" ಎಂದು ನಟ ದರ್ಶನ ಟ್ವೀಟ್​ ಮಾಡಿದ್ದಾರೆ.

Last Updated : Jun 7, 2020, 8:03 PM IST

ABOUT THE AUTHOR

...view details