ಕರ್ನಾಟಕ

karnataka

By

Published : Dec 12, 2019, 8:57 PM IST

ETV Bharat / city

ಪಕ್ಷದಲ್ಲಿನ ಗುಂಪುಗಾರಿಕೆ, ಲಾಬಿ ಬಗ್ಗೆ ಡಿಕೆಶಿ ಹೇಳಿದ್ದೇನು?

ಪಕ್ಷದಲ್ಲಿ ಗುಂಪುಗಾರಿಕೆ ಮಾಡಿ, ಅಧಿಕಾರಕ್ಕಾಗಿ ಲಾಬಿ ಮಾಡುವುದಿದ್ದರೆ ಎಸ್​.ಎಂ.ಕೃಷ್ಣ ಅವಧಿ ಬಳಿಕವೇ ಮಾಡಬಹುದಿತ್ತು. ಅದರ ಅಗತ್ಯ ನನಗಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಸ್ಪಷ್ಟಪಡಿಸಿದರು.

D.K.Shivakumar adressing to media
ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಕ್ಷದಲ್ಲಿ ಗುಂಪುಗಾರಿಕೆ ಮಾಡಿ, ಅಧಿಕಾರಕ್ಕಾಗಿ ಲಾಬಿ ನಡೆಸುವ ಅಗತ್ಯ ನನಗಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ನಂತರ ಈ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಲಾಬಿ ನಡೆಸುತ್ತಿದ್ದಾರೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದಿದ್ದನ್ನು ನೋಡಿದ್ದೇನೆ. ಆ ರೀತಿ ಲಾಬಿ ನಡೆಸುವ ಅಗತ್ಯ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಗುಂಪುಗಾರಿಕೆ ಮಾಡುವವನಲ್ಲ. ಜಾತಿ, ಧರ್ಮದ ಆಧಾರದಲ್ಲಿ ಗುಂಪು ಕಟ್ಟಿಲ್ಲ. ಅದರ ಅಗತ್ಯ ಇದ್ದಿದ್ದರೆ ಎಸ್.ಎಂ.ಕೃಷ್ಣ ಅವರ ಅಧಿಕಾರ ಮುಗಿದ ನಂತರ ಗುಂಪು ಕಟ್ಟಿ ರಾಜಕೀಯ ಮಾಡಬಹುದಿತ್ತು. ಆದರೆ ಆ ಕೆಲಸ ಮಾಡಿದವನಲ್ಲ. ನನ್ನನ್ನು ನನ್ನ ಕ್ಷೇತ್ರದ ಜನ ಮತ್ತು ಪಕ್ಷ ಬೆಳೆಸಿದೆ ಎಂದು ವಿವರಿಸಿದರು.

ಗುಂಪುಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ನಾಯಕರು ಮಾತನಾಡಿರುವ ಬಗ್ಗೆ ನನನ್ನು ಕೇಳಬೇಡಿ. ನಾನು ಏನಕ್ಕೂ ಪ್ರತಿಕ್ರಿಯಿಸುವುದಿಲ್ಲ. ಆ ವಿಚಾರಗಳ ಬಗ್ಗೆ ಅವರನ್ನೇ ಕೇಳಬೇಕು. ಚುನಾವಣೆಯಲ್ಲಿ ಫಲಿತಾಂಶದಿಂದ ಬೇಸರವಾಗಿ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ರೀತಿ ಎಂದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಹೈಕಮಾಂಡ್ ಅವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ, ಶಾಸಕಾಂಗ ಪಕ್ಷದ ನಾಯಕತ್ವದ ಸ್ಥಾನವಾಗಲಿ ಖಾಲಿ ಇಲ್ಲ. ಅವರೂ ಕೂಡ ಮನುಷ್ಯರು. ಮತದಾರರು ನಮ್ಮ ಕೈಹಿಡಿಯಲಿಲ್ಲ ಎಂಬ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ಆ ಸ್ವಾತಂತ್ರ್ಯವೂ ಅವರಿಗಿಲ್ಲವೇ? ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಸೋಲು-ಗೆಲುವು ಸಾಮಾನ್ಯ. ಹಾಗಾಗಿ ಧೃತಿಗೆಡಬಾರದು. ಪ್ರಚಾರದಲ್ಲಿ ಸಾವಿರಾರು ಜನ ಸೇರಿದ್ದರು. ಅಲ್ಲಿಗೆ ಬರುವವರೆಲ್ಲರೂ ಮತ ಚಲಾಯಿಸುವುದಿಲ್ಲ ಎಂಬುದು ಮೊದಲೇ ಗೊತ್ತಿತ್ತು. ಇಂತಹ ಅನೇಕ ಉದಾಹರಣೆಗಳನ್ನು ನೋಡಿದ್ದೇವೆ. ಚಿಕ್ಕಬಳ್ಳಾಪುರ, ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಎಷ್ಟು ಜನ ಸೇರಿದ್ದರು ಎಂಬುದು ನನಗೆ ಗೊತ್ತಿದೆ. ಮಂಡ್ಯ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಪುತ್ರನ ನಾಮಪತ್ರ ಸಲ್ಲಿಕೆ ವೇಳೆ ಹೋಗಿದ್ದೆ. ನಾನು ಅದುವರೆಗೂ ನಾಮಪತ್ರಕ್ಕೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸೇರಿದ್ದನ್ನು ನೋಡಿರಲಿಲ್ಲ. ಆದರೆ, ಆಗಿದ್ದೇ ಬೇರೆ ಎಂದು ಹೇಳಿದರು.

ನನಗೆ ಕಾಂಗ್ರೆಸ್ ಕಾರ್ಯಕರ್ತರ ವಿಶ್ವಾಸ ಮುಖ್ಯ. ಕಾರ್ಯಕರ್ತರು ವಿಶ್ವಾಸ ಕಳೆದುಕೊಳ್ಳಬಾರದು. ಪಕ್ಷದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಯಾರೂ ದ್ವೇಷ ಮಾಡಬಾರದು ಎಂದರು.

ಭಾರತ್ ಬಚಾವ್ ಆಂದೋಲನದಲ್ಲಿ ಪಾಲ್ಗೊಳ್ಳಬೇಕು ಎಂದು ಪಕ್ಷದ ನಾಯಕರು ಸಂದೇಶ ಕಳುಹಿಸಿದ್ದಾರೆ. ಹೀಗಾಗಿ ದೆಹಲಿಗೆ ತೆರಳುತ್ತಿದ್ದೇನೆ. ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಮಾಡುತ್ತಿರುವ ತಿದ್ದುಪಡಿಗಳು ದೇಶಕ್ಕೆ ಮಾರಕ. ಅವರು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಎಲ್ಲ ಪಕ್ಷ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ, ಕೇಂದ್ರ ಸರ್ಕಾರ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details