ಕರ್ನಾಟಕ

karnataka

ETV Bharat / city

ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನ ಮತ ಗಳಿಕೆಗೆ ಗುರಾಣಿ ಆಗಿರುವುದು ದುರದೃಷ್ಟಕರ: ಹೆಚ್‌ಡಿಕೆ - kumarswami tweet against the happenigs in parliments

ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ರಾಜಕೀಯ ಪ್ರತಿಷ್ಠೆಗೆ ಆಹುತಿಯಾಗಿದೆ. ಕಲಾಪಕ್ಕೆ ಜನಪರ ಅಜೆಂಡಾ ಇರಬೇಕೇ ವಿನಾ ಚುನಾವಣೆ ಅಜೆಂಡಾ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ಮತ ಗಳಿಕೆಗೆ ಗುರಾಣಿ ಆಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

former-cm-kumara-swami-tweet-about-happenings-in-parliment
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

By

Published : Feb 18, 2022, 9:49 AM IST

ಬೆಂಗಳೂರು:ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗು ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್‌ ಹೇಳಿದ ಈ ಮಾತು ಪ್ರಜಾಸತ್ತತೆಯನ್ನು ಗೌರವಿಸುವ ಪ್ರತೀ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ, ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೋಸ್ಕರವೇ ಎನ್ನುವಂತಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ. ʼಪ್ರಜಾಪ್ರಭುತ್ವಕ್ಕೆ ಗ್ರಹಣʼ ಹಿಡಿಸುವ ಕೆಲಸ ನಡೆದಿದೆ ಎಂದು ಅವರು ಟೀಕಿಸಿದ್ದಾರೆ.

ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು, ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆಯ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ʼಕಾಲ ಕಸʼ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೇ ಎಂದು ಹೆಚ್‌ಡಿಕೆ ಪ್ರಶ್ನಿಸಿದ್ದಾರೆ.

ಜೊತೆಗೆ, ಕೋವಿಡ್‌ʼನಿಂದಾಗಿ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್‌, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ. ಕಲಾಪಕ್ಕೆ ʼಜನಪರ ಅಜೆಂಡಾʼ ಇರಬೇಕೇ ವಿನಾ ʼಚುನಾವಣೆ ಅಜೆಂಡಾʼ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ʼಮತ ಗಳಿಕೆಗೆ ಗುರಾಣಿʼ ಆಗಿರುವುದು ದುರದೃಷ್ಟಕರ.

ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ʼರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣʼಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ. ಜನರು ಸಂಕಷ್ಟದಲ್ಲಿದ್ದಾರೆ. ಕೋವಿಡ್‌ʼನಿಂದಾಗಿ ಜನರ ಬದುಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್‌ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನಮಂಡಲ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ ಎಂದು ಇದೇ ವೇಳೆ ಹೆಚ್‌ಡಿಕೆ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ:ಕೋವಿಡ್‌ ಹೋರಾಟದಲ್ಲಿ ದೇಶ ಮುನ್ನಡೆಸಿದ ಮೋದಿ ಕುರಿತ ಪುಸ್ತಕ ಇಂದು ಬಿಡುಗಡೆ

ABOUT THE AUTHOR

...view details