ಕರ್ನಾಟಕ

karnataka

ETV Bharat / city

ಅಕ್ರಮ- ಸಕ್ರಮ ಯೋಜನೆಗಾಗಿ ಕಾಯುತ್ತಿದ್ದ ಕಡು ಬಡವರಿಗೆ ರಾಜ್ಯ ಸರ್ಕಾರದಿಂದ ಗುಡ್​ ನ್ಯೂಸ್​ - benglore illegally build houses news

ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿರುವ ಬಡವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಟ್ಟಿದ್ದು, ಅಕ್ರಮ ಸಕ್ರಮ‌ ಯೋಜನೆಯಡಿ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿರುವ ಬಡವರಿಗೆ ಹಕ್ಕು ಪತ್ರ ನೀಡಲು ನಿರ್ಧರಿಸಿದೆ.

R Ashok
ಕಂದಾಯ ಸಚಿವ ಆರ್.ಅಶೋಕ್

By

Published : Jan 23, 2020, 3:02 PM IST

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿರುವ ಬಡವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ.

ವಿಧಾನಸೌಧದಲ್ಲಿ ಆರ್​. ಅಶೋಕ್​ ಸುದ್ದಿಗೋಷ್ಠಿ

ಅಕ್ರಮ ಸಕ್ರಮ‌ ಯೋಜನೆಯಡಿ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿರುವ ಬಡವರಿಗೆ ಹಕ್ಕು ಪತ್ರ ನೀಡಲು ನಿರ್ಧರಿಸಿದೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ‌ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಗಳನ್ನು ಸಕ್ರಮ ಗೊಳಿಸಲಾಗುವುದು. ಜ.28 ಕ್ಕೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ಸಿಎಂ ಯಡಿಯೂರಪ್ಪ 10,000 ಬಡವರಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ ಎಂದು ತಿಳಿಸಿದರು.

20X30, 30X40 ಅಳತೆಯಲ್ಲಿ ಕಟ್ಟಿರುವ ಮನೆಗಳ ಮಾಲೀಕರಿಗೆ ಮಾತ್ರ ಕ್ರಯಪತ್ರ ಮಾಡಿಕೊಡಲಾಗುವುದು. 30 ವರ್ಷದಿಂದ ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿರುವ ಬಡವರಿಗೆ ಮಾತ್ರ ಈ ಅಕ್ರಮ ಸಕ್ರಮ ಯೋಜನೆ ಅನ್ವಯವಾಗಲಿದೆ. 1.1.2012 ರ ಮುನ್ನ ಮನೆ ಕಟ್ಟಿರುವವರಿಗೆ ಮಾತ್ರ ಹಕ್ಕು ಪತ್ರ ವಿತರಿಸಲಾಗುತ್ತದೆ ಎಂದು ತಿಳಿಸಿದರು. ರಾಜ್ಯಾದ್ಯಂತ ಯುದ್ದೋಪಾದಿಯಲ್ಲಿ ಬಡವರಿಗೆ ಅಕ್ರಮ ಸಕ್ರಮ‌ ಯೋಜನೆಯಡಿ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. ವಾರ್ಷಿಕ ಆದಾಯವನ್ನು ಪರಿಗಣಿಸಿ ಬಡವರೆಂದು ಗುರುತಿಸಿ ಹಕ್ಕುಪತ್ರ ವಿತರಿಸಲಾಗುತ್ತದೆ. 94 ಸಿ ಮತ್ತು 94 ಸಿಸಿ ಕಾಯ್ದೆಯಡಿ ಬಡವರಿಗೆ ಹಕ್ಕು ಪತ್ರ ನೀಡಲಾಗುತ್ತಿದೆ‌ ಎಂದರು.

ಯಾರಿಗೆ ಎಷ್ಟು ಶುಲ್ಕ:

20X30 ಅಳತೆಯ ಮನೆಗಳಿಗೆ ಹಕ್ಕುಪತ್ರ ಪಡೆಯಲು ಎಸ್ ಸಿ, ಎಸ್ ಟಿ ವರ್ಗದವರು 2,500 ರೂ. ನೋಂದಣಿ ಶುಲ್ಕ ನೀಡಬೇಕು. ಸಾಮಾನ್ಯ ವರ್ಗ 5 ಸಾವಿರ ರೂ. ಶುಲ್ಕ ಪಾವತಿಸಬೇಕು. 30X40 ನಿವೇಶನಗಳ ಮನೆಗಳಿಗೆ ಹಕ್ಕುಪತ್ರ ಪಡೆಯಲು ಎಸ್ ಸಿ, ಎಸ್ ಟಿ ವರ್ಗದವರು 5,000 ರೂ., ಸಾಮಾನ್ಯ ವರ್ಗದವರು 10,000 ರೂ. ಶುಲ್ಕ ಪಾವತಿಸಬೇಕು.

ಒಟ್ಟು ಬಂದಿರುವ ಅರ್ಜಿ:

ಅಕ್ರಮ ಸಕ್ರಮ ಯೋಜನೆಯಡಿ ರಾಜ್ಯಾದ್ಯಂತ ಒಟ್ಟು 2,53,000 ಅರ್ಜಿಗಳು ಬಂದಿದ್ದವು. ಅದರಲ್ಲಿ 60,061ಅರ್ಜಿಗಳಿಗೆ ಮಂಜೂರಾತಿ ದೊರಕಿದೆ. 1,47,465 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಹಾಗೂ 45,456 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಮುಂದಿನ ಹಂತದಲ್ಲಿ ಈ ಯೋಜನೆಯನ್ನು ರಾಜ್ಯವ್ಯಾಪಿ ವಿಸ್ತರಿಸುತ್ತೇವೆ. ಜನವರಿ 31 ರಂದು ಮಂಗಳೂರು, ಬಳಿಕ ಬೀದರ್ ನಲ್ಲೂ ಹಕ್ಕುಪತ್ರ ವಿತರಿಸಲಾಗುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ABOUT THE AUTHOR

...view details