ಬೆಂಗಳೂರು/ಮಂಗಳೂರು: ಇಂಟರ್ನಶಿಪ್ಗಾಗಿ ಕಚೇರಿಗೆ ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿರುವ ಸರ್ಕಾರಿ ವಿಶೇಷ ಅಭಿಯೋಜಕ ಕೆ.ಎಸ್ಎನ್ ರಾಜೇಶ್ಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ರಾಜೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ಈ ಆದೇಶ ಮಾಡಿದೆ. ಆರೋಪಿ ವೃತ್ತಿಪರ ವಕೀಲನಾಗಿದ್ದು, ಪೊಲೀಸರು, ವಿಶ್ವವಿದ್ಯಾಲಯ ಹಾಗೂ ನ್ಯಾಯಾಧೀಶರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.
ದೂರುದಾರರ ಪರ ವಕೀಲರ ವಾದ ಏನು?
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ದೂರುದಾರರು ನೀಡಿರುವ ದೂರಿನಲ್ಲಿರುವ ಅಂಶಗಳ ಮೇರೆಗೆ ಐಪಿಸಿ ಸೆಕ್ಷನ್ 376 ಅಡಿ ಅತ್ಯಾಚಾರ ಪ್ರಕರಣ ದಾಖಲಿಸಲು ಬರುವುದಿಲ್ಲ. ಹಾಗೆಯೇ, ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ಮರಣದಂಡನೆ ಶಿಕ್ಷೆ ವಿಧಿಸಲಾಗದು. ‘
ಐಪಿಸಿ 354 ಆರೋಪಕ್ಕೆ 3 ವರ್ಷಗಳವರೆಗಷ್ಟೇ ಶಿಕ್ಷೆ ವಿಧಿಸಬಹುದು. ಜತೆಗೆ ದೂರು ನೀಡುವಲ್ಲಿಯೂ ವಿಳಂಬವಾಗಿದೆ. ಇನ್ನು ಸಂತ್ರಸ್ತೆ ಸಿಸಿಟಿವಿ ದೃಶ್ಯಾವಳಿ ನಾಶಪಡಿಸಲಾಗಿದೆ ಎಂದಿದ್ದಾರೆ. ಆದರೆ, ಅದನ್ನು ಈಗಲೂ ಪಡೆದುಕೊಳ್ಳಬಹುದು. ಪೊಲೀಸರ ಮುಂದೆ ಹಾಜರಾದ ವೇಳೆ ಅರ್ಜಿದಾರರನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗಿದೆ. ಹೀಗಾಗಿ, ಅರ್ಜಿದಾರರನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಕೋರಿದರು.
(ಇದನ್ನೂ ಓದಿ: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲರಿಗೆ ನ್ಯಾಯಾಂಗ ಬಂಧನ)
ಇದಕ್ಕೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್ ಪರ ವಕೀಲರು, ಅರ್ಜಿದಾರರನ್ನು ಹೆಚ್ಚಿನ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ. ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಕೆಲವೊಂದು ವಿಡಿಯೋ ಕ್ಲಿಪ್ಗಳನ್ನು ಪಡೆದುಕೊಳ್ಳಲು ಮೊಬೈಲ್ ಕೂಡ ಜಪ್ತಿ ಮಾಡಬೇಕಿದೆ. ಆರೋಪಿ ಪ್ರಭಾವಿಯಾಗಿದ್ದು, ಪೊಲೀಸರಿಗೆ, ನ್ಯಾಯಾಧೀಶರಿಗೆ ಲಂಚ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಆರೋಪಿ ವಿರುದ್ಧದ ಪ್ರಕರಣ ಹೀನ ಕೃತ್ಯವಾಗಿದ್ದು, ನಿರೀಕ್ಷಣಾ ಜಾಮೀನು ನೀಡಿದರೆ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ಕೋರಿದರು.