ಕರ್ನಾಟಕ

karnataka

By

Published : Mar 21, 2022, 7:00 PM IST

ETV Bharat / city

ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣ ದುಡ್ಡು ಸಂಗ್ರಹಿಸುವ ಹುಂಡಿಯಾಗಿದೆ : ಹೆಚ್​ಡಿಕೆ

ಮೂತಿಗೆ ತುಪ್ಪ ಸವರುವಂತೆ ವೈದ್ಯ ಶಿಕ್ಷಣದ ಶುಲ್ಕವನ್ನು ಅಲ್ಪಸ್ವಲ್ಪ ಕಡಿಮೆ ಮಾಡಿ ಸದ್ಯಕ್ಕೆ ಪಾರಾಗುವುದಲ್ಲ. ನವೀನ್ ಸಾವಿನಿಂದ ಪಾಠ ಕಲಿತು ಅದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೀಟ್‌ನಿಂದ ಹೊರ ಬರಲು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ..

HD Kumaraswamy
ಹೆಚ್. ಡಿ.ಕುಮಾರಸ್ವಾಮಿ

ಬೆಂಗಳೂರು : ಶಿಕ್ಷಣವನ್ನು ಉಳ್ಳವರಿಗೆ ಒತ್ತೆ ಇಟ್ಟ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸಗಿದ ಪಾಪಕ್ಕೆ ಮುಗ್ಧ ವಿದ್ಯಾರ್ಥಿ ನವೀನ್ ಬಲಿ ಆಗಿದೆ. ರಾಜಕಾರಣಿಗಳು, ಶ್ರೀಮಂತರಿಗೆ ಉನ್ನತ ಶಿಕ್ಷಣವು ದುಡ್ಡು ಸಂಗ್ರಹ ಮಾಡುವ ಹುಂಡಿಯಾಗಿದೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ದೂರದ ಉಕ್ರೇನ್ ದೇಶದಲ್ಲಿ ಜೀವ ಚೆಲ್ಲಿ ಹುಟ್ಟಿದೂರಿನಲ್ಲಿ ನಿಶ್ಚಲವಾಗಿ ಮಲಗಿದ್ದ ನವೀನ್ ಭಾರತದ ಆತ್ಮಸಾಕ್ಷಿಗೆ ಎದುರಾಗಿರುವ ದೊಡ್ಡ ಪ್ರಶ್ನೆ. ವಿದ್ಯೆಯ ಹೆಸರಿನಲ್ಲಿ ದಂಧೆ ನಡೆಸುವ ದುರಾಸೆಗೂ ಒಂದು ಸವಾಲು. ಹಾಗಾದರೆ, ಇನ್ನೆಷ್ಟು ನವೀನ್​​ರು ಬಲಿ ಆಗಬೇಕು? ಎಂದು ಪ್ರಶ್ನಿಸಿದ್ದಾರೆ.

ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ @CM of Karnataka ಅವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ? ಎಂದು ಹೆಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿದ್ದಾರೆ. ಹಾಗಾದರೆ, ಅಂತಹ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ?. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್​​ಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.

ಮೂತಿಗೆ ತುಪ್ಪ ಸವರುವಂತೆ ವೈದ್ಯ ಶಿಕ್ಷಣದ ಶುಲ್ಕವನ್ನು ಅಲ್ಪಸ್ವಲ್ಪ ಕಡಿಮೆ ಮಾಡಿ ಸದ್ಯಕ್ಕೆ ಪಾರಾಗುವುದಲ್ಲ. ನವೀನ್ ಸಾವಿನಿಂದ ಪಾಠ ಕಲಿತು ಅದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಹಾಗೂ ನೀಟ್‌ನಿಂದ ಹೊರ ಬರಲು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ನೀಟ್ ಮೂಲಕ ವೈದ್ಯಕೀಯ ಸೀಟು ಸಿಗದೇ ಉಕ್ರೇನ್‌ಗೆ ಹೋಗಿ ಉಸಿರು ಚೆಲ್ಲಿದ ನವೀನ್ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ನೀಟ್ ವ್ಯವಸ್ಥೆಗೆ ಚರಮಗೀತೆ ಹಾಡಬೇಕು. ನವೀನ್ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಕ್ಕೆ ಕರುಣಿಸಲಿ.

ಪುತ್ರನ ಪಾರ್ಥಿವ ಶರೀರವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿ ಅವರ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಹುಟ್ಟೂರಿಗೆ ನವೀನ್ ಮೃತದೇಹ ಆಗಮನ: ಪ್ರಧಾನಿಗೆ ಸಿಎಂ ಬೊಮ್ಮಾಯಿ ಧನ್ಯವಾದ

ABOUT THE AUTHOR

...view details