ಕರ್ನಾಟಕ

karnataka

By

Published : Nov 19, 2021, 7:09 PM IST

ETV Bharat / city

ಶಿವಮೊಗ್ಗದ ಕಲ್ಲುಕಾರಿ ಬಳಿ ಸ್ಫೋಟ ಪ್ರಕರಣ: ಪಿಐಎಲ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಶಿವಮೊಗ್ಗ ಕಲ್ಲುಕ್ವಾರಿ ಬಳಿ ಸಂಭವಿಸಿದ್ದ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟ 5 ಮಂದಿಯ ಕುಟುಂಬಕ್ಕೂ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿತರಾದ ಸುಧಾಕರ್, ನರಸಿಂಹ ಮತ್ತು ಅವಿನಾಶ್ ವಿರುದ್ಧ ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ. ಶಿವಮೊಗ್ಗ ಮತ್ತು ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಕ್ವಾರಿಗಳನ್ನು ಸ್ಥಗಿತಗೊಳಿಸಲಾಗಿದೆ.

high court
ಹೈಕೋರ್ಟ್

ಬೆಂಗಳೂರು: 2021ರ ಜನವರಿಯಲ್ಲಿ ಶಿವಮೊಗ್ಗದ ಹೊರವಲಯ ಹುಣಸೋಡುವಿನಲ್ಲಿ ನಡೆದಿದ್ದ ಸ್ಫೋಟದಲ್ಲಿ (Shivamogga quarry explosion case) ಸಾವನ್ನಪ್ಪಿದವರಿಗೆ ಪರಿಹಾರ ನೀಡಲಾಗಿದೆ. ಹಾಗೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​ಗೆ ಮಾಹಿತಿ ನೀಡಿದೆ.

ಅಕ್ರಮ ಕಲ್ಲುಕ್ವಾರಿ ಬಳಿ ಜಿಲೆಟಿನ್​​ ಸ್ಫೋಟ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹಾಗೂ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ವಕೀಲ ವಿಜಯ್ ಕುಮಾರ್ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸರ್ಕಾರ ಕೈಗೊಂಡ ಕ್ರಮ

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸ್ಫೋಟದಲ್ಲಿ ಮೃತಪಟ್ಟ 5 ಮಂದಿ ಕುಟುಂಬಕ್ಕೂ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿತರಾದ ಸುಧಾಕರ್, ನರಸಿಂಹ ಮತ್ತು ಅವಿನಾಶ್ ವಿರುದ್ಧ ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ. ಶಿವಮೊಗ್ಗ ಮತ್ತು ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಕ್ವಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ACB Raid : ಬಿಡಿಎ ಕಚೇರಿ ಮೇಲೆ 40ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ

ಹೇಳಿಕೆ ದಾಖಲಿಸಿಕೊಂಡ ಪೀಠ, ಪ್ರಕರಣ ಸಂಬಂಧ ಸರ್ಕಾರ ಕ್ರಮ ಕೈಗೊಂಡಿರುವುದರಿಂದ ಅರ್ಜಿ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣದ ವಿವರ:

2021ರ ಜ.22ರಂದು ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿಯ ಅಕ್ರಮ ಕಲ್ಲುಕ್ವಾರಿ ಸಮೀಪ ಲಾರಿಯಲ್ಲಿ ತುಂಬಿಸಿಟ್ಟಿದ್ದ ಜಿಲೆಟಿನ್ ಸ್ಫೋಟಗೊಂಡು ಐವರು ಕಾರ್ಮಿಕರು ಮೃತಪಟ್ಟಿದ್ದರು. ಪ್ರಕರಣ ರಾಜ್ಯಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರು, ರಾಜಕೀಯ ನಾಯಕರ ಕುಮ್ಮಕ್ಕಿನಿಂದಲೇ ಅಕ್ರಮ ಕಲ್ಲುಕ್ವಾರಿಗಳು ನಡೆಯುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾಡಳಿತಗಳು ವಿಫಲವಾಗಿವೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದ್ದರು.

ABOUT THE AUTHOR

...view details