ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಬೇಕೋ, ಬೇಡವೋ ಎಂಬುದನ್ನು ಈ ಹಂತದಲ್ಲೇ ತೀರ್ಮಾನಿಸುವುದು ಸೂಕ್ತವಲ್ಲ. ಎಸ್ಐಟಿಯನ್ನು ನಿರ್ದಿಷ್ಟ ಪ್ರಕರಣದ ತನಿಖೆಗಾಗಿ ರಚನೆ ಮಾಡಲಾಗುತ್ತದೆ.
ಅದರಂತೆ ನಿರ್ದಿಷ್ಟ ಪ್ರಕರಣದಲ್ಲಿ ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂಬುದನ್ನು ಅರ್ಜಿಯಲ್ಲಿ ತಿಳಿಸಬೇಕಿತ್ತು. ಆದರೆ, ಕರ್ನಾಟಕದಲ್ಲಿ 2017-2019ರವರಗೆ ನಡೆದಿರುವ ಡ್ರಗ್ಸ್ ಪ್ರಕರಣಗಳನ್ನೆಲ್ಲ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಈ ಹಂತದಲ್ಲಿ ಆ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿತು.
ಇದೇ ವೇಳೆ, ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ಎನ್ ಡಿಪಿಎಸ್ ಕಾಯ್ದೆ ಅಡಿ ದಾಖಲಾದ ಪ್ರಕರಣಗಳ ತನಿಖೆ ನಡೆಸುವ ಅಧಿಕಾರವನ್ನು ಎನ್ಐಎ ಅಧಿಕಾರಿಗಳಿಗೆ ನೀಡಿ ಕೇಂದ್ರ ಸರ್ಕಾರ ಸೆ.22ರಂದು ನೋಟಿಫಿಕೇಷನ್ ಹೊರಡಿಸಿದೆ. ಹೀಗಾಗಿ, ಈ ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬಹುದು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಇತ್ತೀಚೆಗಷ್ಟೇ ಪ್ರಕರಣ ದಾಖಲಾಗಿದೆ. ಈಗಲೇ ಆ ಪ್ರಕರಣದ ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂಬ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.