ಕರ್ನಾಟಕ

karnataka

ETV Bharat / city

ಶಾಲೆ ಪಕ್ಕದಲ್ಲಿ ಮೀನು ಮಾರುಕಟ್ಟೆ ನಿರ್ಮಾಣ: ಪರಿಶೀಲಿಸಲು ಡಿಸಿಗೆ ಹೈಕೋರ್ಟ್ ಸೂಚನೆ - Kaul Bazaar in Bellary City

ಬಳ್ಳಾರಿ ನಗರದ ಕೌಲ್ ಬಜಾರ್ ಸಮೀಪದ ಶಾಲೆ ಪಕ್ಕದಲ್ಲಿ ಮೀನು ಮಾರುಕಟ್ಟೆ ನಿರ್ಮಾಣದಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗಲಿದೆಯೇ?, ಸ್ಥಳದಲ್ಲಿ ನೈರ್ಮಲ್ಯದ ಸಮಸ್ಯೆ ಎದುರಾಗಲಿದೆಯೇ? ಎಂಬುದನ್ನು ಪರಿಶೀಲಿಸಿ ಡಿಸಿ ಹಾಗೂ ಕೆಎಸ್‌ಪಿಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ವರದಿ ಸಿದ್ಧಪಡಿಸುವಂತೆ ಹೈಕೋರ್ಟ್ ಆದೇಶಿಸಿದೆ.

High Court instructs Bellary DC to review fish market construction
ಶಾಲೆ ಪಕ್ಕದಲ್ಲಿ ಮೀನು ಮಾರುಕಟ್ಟೆ ನಿರ್ಮಾಣ: ಪರಿಶೀಲಿಸಲು ಡಿಸಿಗೆ ಹೈಕೋರ್ಟ್ ಸೂಚನೆ

By

Published : Dec 9, 2020, 2:23 PM IST

ಬೆಂಗಳೂರು:ಬಳ್ಳಾರಿ ನಗರದ ಕೌಲ್ ಬಜಾರ್ ಸಮೀಪದ ಶಾಲೆ ಪಕ್ಕದಲ್ಲಿಯೇ ಮೀನು ಮಾರುಕಟ್ಟೆ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ನಿರ್ದೇಶಿಸಿದೆ.

ಶಾಲೆ ಪಕ್ಕದಲ್ಲಿಯೇ ಮೀನು ಮಾರುಕಟ್ಟೆ ನಿರ್ಮಾಣ ಪ್ರಶ್ನಿಸಿ ಕೌಲ್ ಬಜಾರ್‌ನ ಮಹೇಜಬೀನ್ ಸೇರಿ 23 ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಅರ್ಜಿದಾರರ ಜೊತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಮಾರುಕಟ್ಟೆ ನಿರ್ಮಾಣದಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗಲಿದೆಯೇ?, ಸ್ಥಳದಲ್ಲಿ ನೈರ್ಮಲ್ಯದ ಸಮಸ್ಯೆ ಎದುರಾಗಲಿದೆಯೇ? ಎಂಬುದನ್ನು ಪರಿಶೀಲಿಸಿ ಡಿಸಿ ಹಾಗೂ ಕೆಎಸ್‌ಪಿಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ವರದಿ ಸಿದ್ಧಪಡಿಸಬೇಕು. ಈ ವರದಿಗಳನ್ನು ಜನವರಿ 20ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಫೆ.1ಕ್ಕೆ ಮುಂದೂಡಿದೆ.

ಓದಿ:ಜಾಮೀನು ಕೋರಿ ಸಂಪತ್ ರಾಜ್ ಅರ್ಜಿ: ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಹೈಕೋರ್ಟ್ ನೋಟಿಸ್

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಕೌಲ್ ಬಜಾರ್‌ನಲ್ಲಿರುವ ಶಾಲೆಯಲ್ಲಿ 2 ಸಾವಿರಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಯ ಎದುರು ರಾಜಕಾಲುವೆ ಇದೆ. ಇವುಗಳ ಮಧ್ಯೆ ಕೇವಲ 30 ಅಡಿಗಳ ಪಾದಚಾರಿ ಮಾರ್ಗವಿದ್ದು, ಇದೇ ಜಾಗದಲ್ಲಿ ಒತ್ತುವರಿ ಮಾಡಿ ಮೀನು ಮಾರುಕಟ್ಟೆ ನಿರ್ಮಿಸಲಾಗುತ್ತಿದೆ. ಇದರಿಂದ ಶಾಲೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.

ಇಲ್ಲಿ ಮೀನು ಮಾರುಕಟ್ಟೆ ನಿರ್ಮಾಣವಾದರೆ ಶಾಲಾ ಮಕ್ಕಳು ಮತ್ತು ಪಕ್ಕದ ಅರಿಹಂತ್ ನಗರ ಬಡಾವಣೆಯ ನಿವಾಸಿಗಳು ರೈಲ್ವೆ ನಿಲ್ದಾಣಕ್ಕೆ ಹೋಗಲು ಇರುವ ಸಣ್ಣ ರಸ್ತೆಯೂ ಮುಚ್ಚಿ ಹೋಗಲಿದೆ. ಜತೆಗೆ ಸ್ಥಳದಲ್ಲಿ ಶುಚಿತ್ವದ ಕೊರತೆಯೂ ಉಂಟಾಗಲಿದೆ. ಆದ್ದರಿಂದ, ಮೀನು ಮಾರುಕಟ್ಟೆ ನಿರ್ಮಾಣ ಮಾಡದಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details